
‘ಕಡುಬು ತಿನ್ನುವುದು ಕಹಿ ನೀರು ಕುಡಿಯುವುದು.....’: ವಿ. ಸುನಿಲ್ ಕುಮಾರ್
ಕಾರ್ಕಳ: ರಾಜ್ಯವನ್ನು 1,16000 ಕೋಟಿ ರೂ. ಸಾಲದ ಶೂಲಕ್ಕೆ ದೂಡಿರುವ ಸಿದ್ದರಾಮಯ್ಯನವರ ಹದಿನಾರನೇ ಬಜೆಟ್ ಕರ್ನಾಟಕವನ್ನು ಅಕ್ಷರಶಃ ಆರ್ಥಿಕ ದುಸ್ಥಿತಿಗೆ ದೂಡಲಿದೆ. ಪ್ರತಿ ಬಜೆಟ್ನಲ್ಲಿ ಕೇಂದ್ರ ಸರ್ಕಾರವನ್ನು ದೂರುವುದನ್ನೇ ಅಭ್ಯಾಸ ಮಾಡಿಕೊಂಡಿರುವ ಸಿದ್ದರಾಮಯ್ಯನವರ ಬಜೆಟ್ನಲ್ಲಿ 67,877 ಕೋಟಿ ರೂ. ಕೇಂದ್ರದ ಸ್ವೀಕೃತಿಯನ್ನು ತೋರಿಸಿರುವುದು ಗಮನಾರ್ಹ ಅಂಶ.
ಈ ಬಾರಿಯ ಬಜೆಟ್ನಲ್ಲಿ ರಾಜ್ಯಕ್ಕೆ ಅನುಕೂಲಕರವಾಗುವ ಯಾವುದೇ ದೂರಗಾಮಿ ಯೋಜನೆಗಳಿಲ್ಲ. ಬಜೆಟ್ ಎನ್ನುವುದು ನನ್ನ ದೃಷ್ಟಿಯಲ್ಲಿ ಕೇವಲ ಬಿಳಿಹಾಳೆಯಲ್ಲ ಎಂದು ವ್ಯಾಖ್ಯಾನಿಸಿರುವ ಸಿದ್ದರಾಮಯ್ಯನವರು ಶಾಶ್ವತ ಯೋಜನೆಗಳತ್ತ ಗಮನ ಹರಿಸಿಲ್ಲ.
ಕರಾವಳಿ ಭಾಗದ ಜಿಲ್ಲೆಗಳಿಗಂತೂ ಯಾವುದೇ ಕೊಡುಗೆ ಇಲ್ಲ. ಮಂಗಳೂರಿನಿಂದ ಕಾರವಾರದವರೆಗಿನ ಕೊಂಕಣ ರೈಲ್ವೆ ಯೋಜನೆಗೆ ಸರ್ಕಾರ ನೆರವಿನ ಹಸ್ತ ಚಾಚಿಲ್ಲ. ಆಕರ್ಷಣೀಯ ಘೋಷಣೆಗಳು, ಕವಿವಾಣಿಯ ಉಲ್ಲೇಖದಲ್ಲೇ ಬಜೆಟ್ ಪುಸ್ತಕ ತುಂಬಿದ್ದು, ಶಿಕ್ಷಣ, ಆರೋಗ್ಯ, ಜಲಸಂನ್ಮೂಲ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಆಮೂಲಾಗ್ರ ಅಭಿವೃದ್ಧಿಗೆ ಯಾವುದೇ ಕೊಡುಗೆ ಇಲ್ಲ.
ಮುಸ್ಲಿಂರಿಗೆ ವಿಶೇಷ ಆದ್ಯತೆ:
ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂ.ವರೆಗಿನ ಗುತ್ತಿಗೆ ಮತ್ತು 1 ಕೋಟಿ ರೂ.ವರೆಗಿನ ಖರೀದಿಯಲ್ಲಿ ಮುಸ್ಲಿಂ ಮೀಸಲಾತಿ ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ.
ಸಿದ್ದರಾಮಯ್ಯ ಸರ್ಕಾರದ ಹಿಂದು ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ಇಷ್ಟು ದಿನ ಮುಸ್ಲಿಂರಿಗೆ ತೆರೆಮರೆಯಲ್ಲಿ ವಿಶೇಷ ಆದ್ಯತೆ ನೀಡುತ್ತಿದ್ದ ಸಿದ್ದರಾಮಯ್ಯ ಈಗ ಅದನ್ನು ಬಜೆಟ್ಗೂ ವಿಸ್ತರಿಸಿದ್ದಾರೆ. ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ! ಇದು ಎಂದು ಶಾಸಕ ವಿ. ಸುನಿಲ್ ಕುಮಾರ್ ಬಜೆಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ.