
ಮಾ.24ರಂದು ಮಂಗಳೂರಿನಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ
ಮಂಗಳೂರು: ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸುತ್ತಿರುವ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ. ಮುಖ್ಯವಾಗಿ ಮಹಿಳೆಯರ ಜೀವನದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉನ್ನತಿಗೆ ಪ್ರೇರಕ ಶಕ್ತಿಯಾಗಿರುವ ನವೋದಯ ಟ್ರಸ್ಟ್ ಇದೀಗ 25 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, ರಜತ ಸಂಭ್ರಮದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರ ಸೂಕ್ತ ಮಾರ್ಗದರ್ಶನದಲ್ಲಿ ಹಲವಾರು ಜನೋಪಯೋಗಿ ಯೋಜನೆಗಳ ಮೂಲಕ ಗುರುತಿಸಿಕೊಂಡಿರುವ ನವೋದಯ ಟ್ರಸ್ಟ್ , ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ನವೋದಯ ಸ್ವ ಸಹಾಯ ಸಂಘಗಳನ್ನು ಸಂಘಟಿಸಿ, ಈ ಮೂಲಕ ತನ್ನ ಕಾರ್ಯವ್ಯಾಪ್ತಿಯನ್ನು ರಾಜ್ಯಮಟ್ಟಕ್ಕೂ ವಿಸ್ತರಿಸಿಕೊಂಡು ಬಡ ಜನತೆಯ ಅಭ್ಯುದಯಕ್ಕೆ ಶ್ರಮಿಸುತ್ತಿದೆ. 2000ರಲ್ಲಿ ಕೇವಲ 1071 ಗುಂಪುಗಳ ಬಲದೊಂದಿಗೆ ಆರಂಭಗೊಂಡ ನವೋದಯದಲ್ಲಿ ಇದೀಗ 39,500ಕ್ಕೂ ಮಿಕ್ಕಿ ಸ್ವ ಸಹಾಯ ಸಂಘಗಳು ಇದ್ದು, 3,92,773 ಕುಟುಂಬ ಸದಸ್ಯರ ಸಂಖ್ಯಾಬಲವನ್ನು ಹೊಂದಿದೆ.
ಅತ್ಯಂತ ಶಿಸ್ತುಬದ್ದವಾಗಿ ರಚನೆಯಾದ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರಲ್ಲಿ ಭಾವೈಕ್ಯತೆ ಹಾಗೂ ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ನವೋದಯದ ಸದಸ್ಯರೆಲ್ಲರಿಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮೂಲಕ ಏಕರೂಪದ ಸಮವಸ್ತ್ರವನ್ನು ಇದುವರೆಗೆ 5 ಬಾರಿ ವಿತರಿಸಲಾಗಿದೆ. ಇದೀಗ ನವೋದಯ ಸ್ವ ಸಹಾಯ ಸಂಘಗಳ ರಜತ ಸಂಭ್ರಮದ ಹೊಸ್ತಿಲಲ್ಲಿ ನವೋದಯ ಸದಸ್ಯರೆಲ್ಲರಿಗೂ ಸಮವಸ್ತ್ರ ವಿತರಿಸುವ ಕಾರ್ಯಕ್ರಮವನ್ನು ನವೋದಯ ಟ್ರಸ್ಟ್ ಹಮ್ಮಿಕೊಂಡಿದೆ.
ಮಾ.24ರಂದು ಸಮವಸ್ತ್ರ ವಿತರಣೆ..
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭವು ಮಾ.24ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಸತೆ ವಹಿಸುವರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸದಸ್ಯ ಡಿ.ವೇದವ್ಯಾಸ ಕಾಮತ್ ಇವರು ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರವನ್ನು ವಿತರಿಸಲಿರುವರು. ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ಹಾಗೂ ಅದಾನಿ ಫೌಂಡೇಶನ್ ನ ಅಧ್ಯಕ್ಷರಾದ ಕಿಶೋರ್ ಅಳ್ವ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಪ್ರಕಟನೆ ತಿಳಿಸಿದೆ.