
ವೆನ್ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ: ಐವನ್ ಡಿಸೋಜಾ
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸರಕಾರ ಒಪ್ಪಿಗೆ ನೀಡಿದ್ದು, ಬಜೆಟ್ನಲ್ಲಿಯೂ ಅನುದಾನ ಮೀಸಲಿರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಆಸ್ಪತ್ರೆಗೆ ದಕ ಹಾಗೂ ಸುತ್ತಮುತ್ತಲಿನ ಹಲವು ಜಿಲ್ಲೆಗಳ ಜನರು ಚಿಕಿತ್ಸೆಗಾಗಿ ಬರುತ್ತಿದ್ದು, ಈ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿಸುವ ಮೂಲಕ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಅವಕಾಶ ನೀಡುವಂತೆ ಗುರುವಾರ ವಿಧಾನ ಪರಿಷತ್ ಅಧಿವೇಶನದಲ್ಲಿ ಗಮನ ಸೆಳೆದಿದ್ದೆ. ಈ ಬಗ್ಗೆ ಆರೋಗ್ಯ ಸಚಿವರು ಒಪ್ಪಿಗೆ ಸೂಚಿಸಿದ್ದರು ಎಂದು ಹೇಳಿದರು.
ದ.ಕ. ಮತ್ತು ಒಟ್ಟು ಕರ್ನಾಟಕದ ಜನಸಂಖ್ಯೆಯ ಶೇ. ೩.೫ರಷ್ಟು ಕ್ರೈಸ್ತ ಸಮುದಾಯದವರಿದ್ದು, ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂಬುದು ನಮ್ಮ ಪ್ರಮುಖ ಆಗ್ರಹವಾಗಿತ್ತು. 20014ರಲ್ಲಿ ಮೊದಲ ಬಾರಿಗೆ ನಾನು ಕ್ರೈಸ್ತ ಅಭಿವೃದ್ಧಿ ನಿಗಮದ ಬಗ್ಗೆ ಪ್ರಸ್ತಾಪಿಸಿದ್ದೆ. 2019ನೇ ಸಾಲಿನಲ್ಲಿ ಮಂಜೂರು ಮಾಡಿದರೂ ಕಾರ್ಯಗತ ಆಗಿರಲಿಲ್ಲ. ಈಗ ಬಜೆಟ್ ನಲ್ಲಿ ಘೋಷಣೆ ಜೊತೆಗೆ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. 250 ಕೋಟಿ ಅನುದಾನ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟಕ್ಕೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ನಿಗಮದಲ್ಲಿ ಮಾಡುವ ತೀರ್ಮಾನಗಳು, ದುಡ್ಡಿನ ಹಂಚಿಕೆ ನೇರವಾಗಿ ನಿರ್ದೇಶನಾಲಯದ ಮೂಲಕ ಮಾಡುವ ಜತೆಗೆ ಮ್ಯಾಚಿಂಗ್ ಗ್ರಾಂಟ್ ಕೂಡಾ ಒದಗಿಸಲು ಸಾಧ್ಯ ಆಗಲಿದೆ. ಸದ್ಯ ಅಲ್ಪಸಂಖ್ಯಾತ ನಿರ್ದೇಶನಾಲಯದಡಿ ಇದು ಒಳಪಡುತ್ತಿದ್ದು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಪ್ರತ್ಯೇಕ ನಿರ್ದೇಶನಾಲಯವಿದೆ ಎಂದು ಅವರು ಹೇಳಿದರು.
ಶಾಸಕರಾಗಿ ವೇದವ್ಯಾಸ ಕಾಮತ್ ಅವರು ಹೋದ, ಬಂದಲೆಲ್ಲಾ, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷದ ಸದಸ್ಯರನ್ನು ಹೀಯಾಳಿಸುವುದನ್ನು ಬಿಡಬೇಕು. ಅವರು ಕ್ಷೇತ್ರದ ಎಲ್ಲಾ ಜನರ ಶಾಸಕರು ಎಂಬುದನ್ನು ಅರಿತು ಜವಾಬ್ಧಾರಿಯಿಂದ ವರ್ತಿಸಬೇಕು ಎಂದು ಹೇಳಿದರು.
ಪಕ್ಷದ ಮುಖಂಡರಾದ ಶಾಲೆಟ್ ಪಿಂಟೋ, ಸುರೇಂದ್ರ ಕಾಂಬ್ಳಿ, ವಿಕಾಸ್ ಶೆಟ್ಟಿ, ಸುಧಾಕರ ಜೋಗಿ, ಯಶವಂತ ಪ್ರಭು ಮೊದಲಾದವರು ಉಪಸ್ಥಿತರಿದ್ದರು.