
ಎಸ್.ಸಿ, ಎಸ್.ಟಿ ಕಾರ್ಯಕ್ರಮಗಳ ಅನುದಾನ: ಪ್ರಗತಿ ಸಾಧಿಸಲು ಸೂಚನೆ
ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಅಪರಾಧ ಮತ್ತು ಪರಿಹಾರ ವಿವರಗಳ ಕೈಪಿಡಿಯನ್ನು ಸಮಿತಿ ಸದಸ್ಯರಿಗೆ ನೀಡಿ ಅದರಲ್ಲಿರುವ ಧ್ಯೇಯೋದ್ದೇಶವನ್ನು ಪರಿಪಾಲಿಸಿಕೊಂಡು ಹೋಗಬೇಕು ಎಂದರು.
ದೌರ್ಜನ್ಯಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಈ ಸಮಿತಿಯಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ಅವರು ಸೂಚಿಸಿದರು.
ಜನವರಿ 2025 ರಿಂದ ಮಾರ್ಚ್ 12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಜಾತಿ ನಿಂದನೆ ಪ್ರಕರಣ, 1 ಆತ್ಮಹತ್ಯೆ, 1 ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಒಟ್ಟು 5,10,000 ರೂ. ಪರಿಹಾರ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿಗಳ ನಿ??ಧ ಮತ್ತು ಪುನರ್ವಸತಿಯ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಮಲ ಹೊರುವ ಪದ್ಧತಿ ನಿರ್ಮೂಲನೆಯಾಗಬೇಕು ಎಂದು ಹೇಳಿದರು. ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಅವರಿಗೆ ಬೇಕಾಗುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂದು ಸೂಚಿಸಿದರು.
ಎಸ್.ಸಿ.ಪಿ-ಟಿ.ಎಸ್.ಪಿ ಸಮಿತಿ ಸಭೆಯಲ್ಲಿ 2024-25ನೇ ಸಾಲಿನ ವಿವಿಧ ಇಲಾಖೆಗಳ ಎಸಿಪಿ-ಟಿಎಸ್ಪಿ ಯೋಜನೆಯ ಅನುದಾನಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ನಡೆಸಿದರು. ಕಡಿಮೆ ಪ್ರಗತಿ ಸಾಧಿಸಿದ ಇಲಾಖೆಗಳಿಗೆ ಈ ತಿಂಗಳೊಳಗಡೆ ಎಸ್ಸಿಪಿ-ಟಿಎಸ್ಪಿ ಯೋಜನೆಯ ಅನುದಾನವನ್ನು ಬಳಕೆ ಮಾಡುವಂತೆ ಸೂಚಿಸಿದರು.
2023-24 ಮತ್ತು 2024-25ನೇ ಸಾಲಿನ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಸಮಿತಿ ಸಭೆಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಲ್ಲಿ 1 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಮಹಿಳಾ ಸ್ವ ಸಹಾಯ ಸಂಘಗಳ ವಿವಿಧ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದವರಿಗೆ ಈ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಅವರು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್, ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್ ಗೋಯಲ್, ವಿವಿಧ ತಾಲೂಕು ತಹಶೀಲ್ದಾರ್ಗಳು, ಸಮಾಜ ಕಲ್ಯಾಣ ಉಪನಿರ್ದೇಶಕಿ ಹೇಮಲತಾ, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.