
ಹಜ್ ಭವನಕ್ಕೆ ಇನಾಯತ್ ಅಲಿ 8 ಕೋಟಿ ಮೌಲ್ಯದ ಭೂಮಿ ದಾನ
ಮಂಗಳೂರು: ಹಜ್ ಭವನ’ ನಿರ್ಮಾಣಕ್ಕಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಸುಮಾರು 8 ಕೋಟಿ ರೂ. ಮೌಲ್ಯದ 1.80 ಎಕರೆ ಭೂಮಿ ದಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹಜ್ ಭವನ ನಿರ್ಮಾಣಕ್ಕಾಗಿ ಸರಕಾರ 10 ಕೋಟಿ ರೂ. ಬಿಡುಗಡೆ ಮಾಡಿ ಕಾಯ್ದಿರಿಸಿತ್ತು. ಆದರೆ ಸೂಕ್ತ ನಿವೇಶನ ಸಿಗದಿದ್ದ ಕಾರಣ ಹಜ್ ಭವನ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಇನಾಯತ್ ಅಲಿ ಹಾಗೂ ಅವರ ಕುಟುಂಬ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಸುಮಾರು 1.80 ಎಕರೆ ಜಾಗವನ್ನು ಹಜ್ ಸಮಿತಿಗೆ ಹಸ್ತಾಂತರ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಹಜ್ ಭವನ ನಿರ್ಮಾಣಕ್ಕಾಗಿ ಇನಾಯತ್ ಅಲಿ ಕುಟುಂಬ ತಿಂಗಳ ಹಿಂದೆಯೇ ಹಜ್ ಸಮಿತಿಯನ್ನು ಸಮೀಪಿಸಿ ನಿವೇಶನದ ದಾಖಲೆ ಪತ್ರಗಳನ್ನು ಪರಿಶೀಲಿಸಿತ್ತು. ಆ ಬಳಿಕ ಕರ್ನಾಟಕ ರಾಜ್ಯ ಹಜ್ ಕಮಿಟಿಯ ಅಧ್ಯಕ್ಷ ಝುಲ್ಫಿಕರ್ ಅಹ್ಮದ್ ಟಿಪ್ಪುಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹರ್ಷ ವ್ಯಕ್ತಪಡಿಸಿದ್ದಲ್ಲದೆ, ಇನಾಯತ್ ಅಲಿ ಕುಟುಂಬಕ್ಕೆ ಧನ್ಯವಾದಗಳನ್ನೂ ಅರ್ಪಿಸಿದ್ದರು.
ಬುಧವಾರ ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿಯವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇನಾಯತ್ ಅಲಿ ಕುಟುಂಬ ಮತ್ತು ರಾಜ್ಯ ಹಜ್ ಕಮಿಟಿಯ ಮುಖಂಡರು, ಅಧಿಕಾರಿಗಳು ಹಾಗೂ ಧಾರ್ಮಿಕ ಧರ್ಮಗುರುಗಳ ಸಮ್ಮುಖದಲ್ಲಿ ಹಜ್ ಭವನಕ್ಕಾಗಿ ದಾನರೂಪದಲ್ಲಿ ನೀಡುತ್ತಿರುವ ಜಾಗದ ದಾಖಲೆ ಪತ್ರಗಳಿಗೆ ಸಹಿ ಹಾಕಿ ಹಸ್ತಾಂತರಿಸಿದರು.
ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷ ಝುಲ್ಫಿಕರ್ ಅಹ್ಮದ್ ಟಿಪ್ಪು, ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಸರ್ಫರಾಝ್ ಖಾನ್, ಯೆನೆಪೊಯ ವಿವಿ ಕುಲಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿ, ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ.ಯು.ಟಿ. ಇಫ್ತಿಕಾರ್ ಫರೀದ್, ಉದ್ಯಮಿಗಳಾದ ರಿಯಾಝ್ ಬಾವ, ಎಸ್ಎಂ.ರಶೀದ್ ಹಾಜಿ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ, ಅಹ್ಮದ್ ಬಾವ, ಬಿ.ಎಸ್.ಬಶೀರ್, ರಾಜ್ಯ ಹಜ್ ಸಮಿತಿಯ ಸದಸ್ಯ ಸೈಯದ್ ಮುಜಾಹಿದ್, ನ್ಯಾಯವಾದಿ ಅಬ್ದುಲ್ ಅಝೀಝ್, ದ.ಕ. ವಕ್ಫ್ ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ದ.ಕ. ಜಿಲ್ಲಾ ಹಜ್ ಕಮಿಟಿಯ ಸದಸ್ಯರಾದ ಸೈಯದ್ ಅಶ್ರಫ್ ತಂಙಳ್, ಇನಾಯತ್ ಅಲಿಯವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.