
ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಹತ್ಯೆ ಪ್ರಕರಣ: ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಖಂಡನೆ
ಮಂಗಳೂರು: ನಗರ ಹೊರವಲಯದ ಕುಡುಪು ಮೈದಾನದ ಬಳಿ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿರುವ ಕೃತ್ಯ ಖಂಡನೀಯ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರು ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.
ಮುಸ್ಲಿಂ ವಲಸೆ ಕಾರ್ಮಿಕನು ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿ ಹಬ್ಬಿಸಿ ಆತನನ್ನು ಗುಂಪು ಹತ್ಯೆಗೈದಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಮಾಜಿ ಕಾರ್ಪೊರೇಟರ್ ಓರ್ವರ ಪತಿಯೂ ಗುಂಪಿನಲ್ಲಿರುವ ಆರೋಪ ಕೇಳಿಬಂದಿದೆ. ಸ್ಥಳೀಯ ಶಾಸಕರು ಮತ್ತು ಬಿಜೆಪಿ ನಾಯಕರು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿದೆ.
ಮಂಗಳೂರು ಪೊಲೀಸರ ಮೌನದ ಬಗ್ಗೆಯೂ ಶಂಕೆ ಉಂಟಾಗಿದೆ. ಹಾಗಾಗಿ ಪೊಲೀಸರು ನಿಷ್ಪಕ್ಷಪಾತ ವಾಗಿ ಮತ್ತು ಗಂಭೀರವಾಗಿ ಈ ಪ್ರಕರಣವನ್ನು ತನಿಖೆ ನಡೆಸಬೇಕು. ವಿಶೇಷ ತನಿಖಾ ತಂಡವನ್ನು ರಚಿಸಿ ಅಮೂಲಾಗ್ರ ತನಿಖೆ ನಡೆಸಬೇಕು. ಸತ್ಯ ಹೊರಗೆ ಬರಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.