ಪಹಲ್ಗಾಮ್ ಉಗ್ರರ ದಾಳಿ: ಜಿಲ್ಲೆಯಲ್ಲಿ ಕಟ್ಟೆಚ್ಚರ

ಪಹಲ್ಗಾಮ್ ಉಗ್ರರ ದಾಳಿ: ಜಿಲ್ಲೆಯಲ್ಲಿ ಕಟ್ಟೆಚ್ಚರ

ಮಂಗಳೂರು: ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಮಂಗಳೂರು ಪೊಲೀಸ್ ಆಯುಕ್ತಾಲಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಈಗಾಗಲೇ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದೆ. 

ಬೀಟ್ ಪೊಲೀಸರು, ಚೆಕ್‌ಪೋಸ್ಟ್‌ಗಳಲ್ಲಿರುವ ಪೊಲೀಸರು ಹೆಚ್ಚು ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ರಾತ್ರಿ ವೇಳೆ ಗಸ್ತು ಹೆಚ್ಚಿಸುವ ನಿಟ್ಟಿನಲ್ಲಿಯೂ ಠಾಣಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.ಆಗತ್ಯವಿದ್ದಲ್ಲಿ ಹೆಚ್ಚುವರಿ ಸಿಬಂದಿ ನಿಯೋಜನೆಗೂ ಉದ್ದೇಶಿಸಲಾಗಿದೆ.

ಶಾಲೆ, ಪ.ಪೂ. ಕಾಲೇಜಿಗೆ ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ವಿವಿಧ ಧಾರ್ಮಿಕ ಕೇಂದ್ರಗಳು, ಬೀಚ್ ಸಹಿತ ವಿವಿಧ ಪ್ರವಾಸಿ ತಾಣಗಳ ಮೇಲೂ ಈಗಾಗಲೇ ನಿಗಾವಹಿಸಲಾಗಿದೆ. ಅನುಮಾನಾಸ್ಪದವಾಗಿ ವರ್ತಿಸುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆಯೂ ಹಿರಿಯ ಅಧಿಕಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೇಲೆಯೂ ತೀವ್ರ ನಿಗಾ ವಹಿಸಲಾಗುತ್ತಿದೆ.

ವಿಮಾನ ನಿಲ್ದಾಣ, ಬಂದರು, ವಿವಿಧ ಕೇಂದ್ರ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಭದ್ರತೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಂತೆ ಈಗಾಗಲೇ ಜಿಲ್ಲಾಡಳಿತದಿಂದಲೂ ಸೂಚನೆ ರವಾನೆಯಾಗಿದೆ. ಈ ಸಂಸ್ಥೆಗಳಲ್ಲಿ ಭದ್ರತೆಯಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯವರು ಗಸ್ತು ಸಹಿತ ಭದ್ರತೆಯನ್ನು ಬಿಗುಗೊಳಿಸಿದ್ದಾರೆ. ಸಮುದ್ರ ತೀರದಲ್ಲಿ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದೆ. ರೈಲು ನಿಲ್ದಾಣದಲ್ಲಿಯೂ ಪೊಲೀಸ್ ರೈಲ್ವೇ ಪೊಲೀಸರಿಗೆ ಇಲಾಖೆ ಈಗಾಗಲೇ ಅಲರ್ಟ್ ಆಗಿರುವಂತೆ ಸೂಚಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article