
ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು: ರೂ.300 ಕೋಟಿ ಅನುದಾನಕ್ಕೆ ಆಗ್ರಹ
ಪುತ್ತೂರು: ಪುತ್ತೂರು ಜನತೆಯ ದಶಕಗಳ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ಈ ಬಾರಿ ರಾಜ್ಯ ಬಜೆಟ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಕಾಲೇಜಿಗೆ ಪೂರಕವಾಗಿ 400 ಬೆಡ್ಗಳ ಆಸ್ಪತ್ರೆಯ ನಿರ್ಮಾಣಕ್ಕಾಗಿ ರೂ.300 ಕೋಟಿ ಅನುದಾನವನ್ನು ತಕ್ಷಣ ಮಂಜೂರು ಮಾಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ ಅವರು ಸಚಿವದ್ವಯರಿಗೆ ಮನವಿ ನೀಡಿ ಆಗ್ರಹಿಸಿದರು.
ಪುತ್ತೂರಿನಲ್ಲಿ ಬನ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ಮೆಡಿಕಲ್ ಕಾಲೇಜಿಗಾಗಿ 40 ಎಕರೆ ಪ್ರದೇಶವನ್ನು ಕಾಯ್ದಿರಿಸಲಾಗಿದ್ದು, ಇಲ್ಲಿ ನೂತನ ಸುಸಜ್ಜಿತ ಆಸ್ಪತ್ರೆಯ ನಿರ್ಮಾಣಕ್ಕಾಗಿ ಅನುದಾನ ಬೇಕಾಗಿದ್ದು, ಈ ಸ್ಥಳವನ್ನು ಅಶೋಕ್ ರೈ ಅವರು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಜತೆಗೆ ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಲಾಗಿದೆ. ಆದ್ದರಿಂದ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣದ ಬಳಿಕ ಮೆಡಿಕಲ್ ಕಾಲೇಜು ಪ್ರಕ್ರಿಯೆಗಳು ಆರಂಭವಾಗಲಿದೆ ಎಂದು ಸಚಿವದ್ವಯರಿಗೆ ಶಾಸಕರು ಮಾಹಿತಿ ನೀಡಿದರು. ಈ ಬಗ್ಗೆ ಸಚಿವರಿಂದ ಭರವಸೆ ದೊರೆತಿದೆ ಎಂದು ಶಾಸಕರು ತಿಳಿಸಿದ್ದಾರೆ.
ಮೆಡಿಕಲ್ ಕಾಲೇಜು ಆರಂಭಕ್ಕೆ ಪೂರಕವಾಗಿ 400 ಬೆಡ್ ನ ಆಸ್ಪತ್ರೆ ನಿರ್ಮಾಣವಾಗಬೇಕಾಗಿದ್ದು, ಈ ಬಗ್ಗೆ ಇಬ್ಬರು ಸಚಿವರಲ್ಲಿ ಮಾತುಕತೆ ನಡೆಸಲಾಗಿದೆ. ಇದಕ್ಕಾಗಿ ರೂ.300 ಕೋಟಿ ಅನುದಾನದ ಬೇಡಿಕೆಯನ್ನು ನೀಡಲಾಗಿದೆ. ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಮಾಡುವ ಭರವಸೆ ದೊರೆತಿದ್ದು, ಹಂತ ಹಂತವಾಗಿ ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ವಿಚಾರಗಳು ವೇಗವನ್ನು ಪಡೆದುಕೊಳ್ಳಲಿವೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.