.jpeg)
ತಾಯಿಯ ಸಾವಿಗೆ ಕಾರಣವಾದ ಆರೋಪಿಗೆ ಶಿಕ್ಷೆ
Wednesday, April 30, 2025
ಪುತ್ತೂರು: ಕಳೆದ ಆರು ವರ್ಷಗಳ ಹಿಂದೆ ನಡೆದ ಘಟನೆಯೊಂದರಲ್ಲಿ ತನ್ನ ತಾಯಿಯ ಸಾವಿಗೆ ಕಾರಣವಾದ ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಡಬ ತಾಲೂಕಿನ ಕ್ಯಾಮಣ ಗ್ರಾಮದ ಅಂಕಜಾಲು ನವಗ್ರಾಮ ಕಾಲನಿ ನಿವಾಸಿ ನಾವೂರ ಎಂಬವರ ಪುತ್ರ ಗೋಪಾಲ ಯಾನೆ ಗೋಪ ಶಿಕ್ಷೆ ವಿಧಿಸಲ್ಪಟ್ಟ ಆರೋಪಿ.
ಈತ 2019ರ ಫೆಬ್ರವರಿ 15 ರಂದು ರಾತ್ರಿ ತನ್ನ ತಾಯಿ ಚೀಂಕುರು ಎಂಬವರೊಂದಿಗೆ ಜಗಳವಾಡಿ ಎಲೆ ಅಡಿಕೆ ಹುಡಿಮಾಡುವ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಬಳಿಕ ಚಿಕಿತ್ಸೆ ಕೊಡಿಸದೆ ನಿರ್ಲಕ್ಷ್ಯ ವಹಿಸಿದ ಕಾರಣದಿಂದ 2019ರ ಫೆಬ್ರವರಿ 19 ರಂದು ಚೀಂಕುರು ಮೃತಪಟ್ಟಿದ್ದರು.
ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿಗೆ 5 ವರ್ಷ ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ 3 ತಿಂಗಳ ಸಾಧಾರಣ ಶಿಕ್ಷೆ ಅನುಭವಿಸುವಂತೆ ಆದೇಶಿಸಿ ತೀರ್ಪು ನೀಡಿದೆ.