
ಬೆಲೆ ಏರಿಕೆ ವಿರುದ್ಧದ ಬಿಜೆಪಿ ಪ್ರತಿಭಟನೆ ನಾಟಕ: ಎಂ. ವೆಂಕಪ್ಪ ಗೌಡ
ಸುಳ್ಯ: ರಾಜ್ಯದಲ್ಲಿ ಬೆಲೆ ಏರಿಕೆ ಉಂಟಾಗಿದೆ ಎಂದು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ತಮ್ಮ ಪಕ್ಷದೊಳಗಿನ ಆಂತರಿಕ ಕಲಹವನ್ನು ಮರೆ ಮಾಚಲು ಮಾಡುವ ನಾಟಕ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಆರೋಪಿಸಿದ್ದಾರೆ.
ಸುಳ್ಯ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ಅಡುಗೆ ಅನಿಲ ದರ ಹಾಗೂ ಪೆಟ್ರೋಲ್, ಡೀಸೆಲ್ ಸುಂಕವನ್ನು ಹೆಚ್ಚಿಸಿದೆ. ಇದರ ವಿರುದ್ಧ ಬಿಜೆಪಿ ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.
2014 ರಿಂದ 2025ರ ಅವಧಿಯಲ್ಲಿ ವಿವಿಧ ವಸ್ತುಗಳ ಬೆಲೆ ಏರಿಕೆ ಆಗಿರುವ ಪಟ್ಟಿಯನ್ನು ಅವರು ಬಿಡುಗಡೆ ಮಾಡಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷತೆ ನೇಮಕ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಈ ಕುರಿತು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ, ನಗರ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಭಟ್, ಶರೀಫ್ ಕಂಠಿ, ಧೀರಾ ಕ್ರಾಸ್ತಾ, ರಿಯಾಝ್ ಕಟ್ಟೆಕ್ಕಾರ್, ನಂದರಾಜ ಸಂಕೇಶ್ ಉಪಸ್ಥಿತರಿದ್ದರು.