.jpeg)
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ-ತನಿಖೆಗೆ ನಾಲ್ಕು ತಂಡ ರಚನೆ: ಗೃಹಸಚಿವರು
Friday, May 2, 2025
ಬೆಂಗಳೂರು: ಬಜ್ಪೆಯಲ್ಲಿ ಗುರುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ರಾಜ್ಯ ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹಸಚಿವರು, ಮಂಗಳೂರು ಶಾಂತಿಗೆ ಮರಳುತ್ತಾ ಇತ್ತು. ಆದರೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಘಟನೆಗಳು ದ.ಕ. ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ಇದಕ್ಕೆ ಕಾರಣವಾದವರನ್ನು ಯಾವುದೇ ಕಾರಣಕ್ಕೂ ಸರಕಾರ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಈಗಾಗಲೇ ಆರಂಭಿಸಲಾಗಿದೆ. ಮಂಗಳೂರಿಗೆ ಎಡಿಜಿಪಿಯವರನ್ನು ಕಳುಹಿಸಲಾಗಿದೆ. ತನಿಖೆಯ ವರದಿಯನ್ನು ಕೇಳಿದ್ದೇನೆ. ಯಾವುದೇ ಕಾರಣಕ್ಕೂ ಕೊಲೆ ಆರೋಪಿಗಳನ್ನು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.