
ಸುಹಾಸ್ ಹತ್ಯೆ ಪ್ರಕರಣ: ಬಿಜೆಪಿಯಿಂದ ಕುಟುಂಬಕ್ಕೆ 25 ಲಕ್ಷ ಪರಿಹಾರ
ಮಂಗಳೂರು: ದುಷ್ಕರ್ಮಿಗಳಿಂದ ಕಳೆದ ರಾತ್ರಿ ಬಜ್ಪೆಯಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಮನೆಗೆ ಶುಕ್ರವಾರ ವಿಪಕ್ಷ ನಾಯಕ ಆರ್ ಅಶೋಕ್ ಜೊತೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆ ಮಂದಿಗೆ ಸಾಂತ್ವನ ಹೇಳಿದರು.
ಬಳೀಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿ. ವೈ. ವಿಜಯೇಂದ್ರ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುಹಾಸ್ ಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ನಡೆದ ಈ ಘಟನೆ ಖಂಡನಾರ್ಹ. ಬಿಜೆಪಿಯು ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಸುಹಾಸ್ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ಇಲ್ಲದಿರುವುದು ಪೊಲೀಸರ ವೈಫಲ್ಯ ಎಂದರು.
ಈ ಘಟನೆಯಲ್ಲಿ ರಾಜ್ಯ ಸರಕಾರದ, ಗೃಹ ಇಲಾಖೆಯ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಸರಕಾರದ ನೀತಿಗಳಿಂದ ಹಿಂದೂ ಸಂಘಟನೆಗಳಿಗೆ, ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರಕಾರದ ಮೇಲೆ ವಿಶ್ವಾಸವೇ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಸುಹಾಸ್ ಕುಟುಂಬಕ್ಕೆ ಧೈರ್ಯ ತುಂಬಿದ್ದೇವೆ. ಸಾಂತ್ವನ ಹೇಳಿದ್ದೇವೆ. ಕುಟುಂಬದ ಆಧಾರ ಸ್ಥಂಭವೇ ಕಳಚಿ ಬಿದ್ದಿದೆ. ಈ ಸಂದರ್ಭದಲ್ಲಿ ಆ ಬಡ ಕುಟುಂಬದ ಕೊತೆ ನಾವಿದ್ದೇವೆ. ಪಕ್ಷದ ಪರವಾಗಿ 25 ಲಕ್ಷ ರೂ. ಪರಿಹಾರ ಹಣವನ್ನು ಘೋಷಣೆ ಮಾಡುತ್ತಿದ್ದೇವೆ. ಘಟನೆಯ ಗಂಭೀರತೆ, ಕುಟುಂಬದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸರಕಾರವೂ ಪರಿಹಾರ ಘೋಷಣೆ ಮಾಡಬೇಕು ಎಂದು ಅವರು ಆಗ್ರಸಿದರು.
‘ಈ ರೀತಿಯ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಇಂತಹ ಘಟನೆಗಳು ನಡೆದಾಗ ರಾಜ್ಯ ಸರಕಾರ ಯಾವತ್ತೂ ಹಿಂದೂಪರ ಸಂಘಟನೆಗಳ ಪರವಾಗಿ ನಿಂತಿಲ್ಲ. ಸರಕಾರಕ್ಕೆ ಮನುಷ್ಯತ್ವ ಇದ್ದರೆ ಪರಿಹಾರ ಘೋಷಣೆ ಮಾಡಬೇಕು”, ಎಂದರು.
ಶಾಸಕರಾದ ಭರತ್ ಶೆಟ್ಟಿ, ರಾಜೇಶ್ ನಾಯ್ಕ, ಯಶ್ ಪಾಲ್ ಸುವರ್ಣ, ಭಾಗೀರತಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮೊದಲಾದವರಿದ್ದರು.