
ಶಾಲಾ-ಕಾಲೇಜು ಸಮೀಪದ ಅಂಗಡಿಗಳಲ್ಲಿ ಸಿಗರೇಟ್, ತಂಬಾಕು ಮಾರಿದರೆ ಲೈಸನ್ಸ್ ರದ್ದು
ಮಂಗಳೂರು: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ತಂಬಾಕು ಸೇವನೆಯಿಂದಾಗುವ ತೀವ್ರ ಪರಿಣಾಮದ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಸರಕಾರಿ ಕಚೇರಿ ಮಾತ್ರವಲ್ಲದೆ ಸಾರ್ವಜನಿಕ ಪ್ರದೇಶಗಳಲ್ಲೂ ತಂಬಾಕು ಸೇವನೆ ಮತ್ತು ಮಾರಾಟ ನಿಷೇಧಿತ ನಾಮಫಲಕವನ್ನು ಅಳವಡಿಸಬೇಕು ಎಂದು ಸೂಚಿಸಿದರು.
ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಬೇಕು. ಶಾಲಾ ವಠಾರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶದಲ್ಲಿ ತಂಬಾಕು ಮಾರಾಟ ಮತ್ತು ಬಳಕೆ ಕಂಡು ಬಂದಲ್ಲಿ ಪರವಾನಿಗೆಯನ್ನು ರದ್ದುಗೊಳಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಶಾಲಾ ವಠಾರವನ್ನು ತಂಬಾಕು ಮುಕ್ತಗೊಳಿಸಲು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಬೇಕು. ತಂಬಾಕು ಸೇವನೆಯ ಪರಿಣಾಮದ ಬಗ್ಗೆ ಶಾಲಾ ಸುತ್ತಮುತ್ತಲು ಅರಿವಿನ ಪ್ರಚಾರ ಅಗತ್ಯ ಎಂದರು. ನಗರಾಡಳಿತ, ಪುರಸಭೆ, ಹಾಗೂ ಪಟ್ಟಣ ಪಂಚಾಯತ್ ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಪರವಾನಗಿಯನ್ನು ಕಡ್ಡಾಯಗೊಳಿಸಬೇಕು. ಪರವಾನಗಿರಹಿತ ತಂಬಾಕು ಮಾರಾಟಗಾರರ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಮುಂದಿನ ಸಭೆಯಲ್ಲಿ ವರದಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತಂಬಾಕು ಮಾರಾಟ ಮತ್ತು ಬಳಕೆದಾರರ ವಿರುದ್ಧ ನಗರದಲ್ಲಿ 527 ಪ್ರಕರಣಗಳು ದಾಖಲಾಗಿದ್ದು, ಜನವರಿ 2025 ರಿಂದ ಈವರೆಗೂ ಒಟ್ಟು 73,770 ದಂಡ ವಸೂಲಾತಿ ಮಾಡಲಾಗಿದೆ.
ಎಸಿಪಿ ಗೀತಾ ಕುಲಕರ್ಣಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ, ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಪ್ರಸಾದ್, ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್, ಪುಂಡಲೀಕ ಉಪಸ್ಥಿತರಿದ್ದರು.