
ಗುಪ್ತಚರ, ಪೊಲೀಸ್ ಇಲಾಖೆ ವೈಫಲ್ಯ: ಐವನ್ ಡಿಸೋಜಾ ಆರೋಪ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋಮುದ್ವೇಷದ ಕೊಲೆ ಪ್ರಕರಣದಲ್ಲಿ ಗುಪ್ತಚರ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲವು ಲೋಪದೋಷಗಳು ಇರುವುದನ್ನು ಜನಾಭಿಪ್ರಾಯದ ಮೇಲೆ ಒಪ್ಪಿಕೊಳ್ಳುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋಮು ಪ್ರಚೋದನಕಾರಿ ಭಾಷಣ ಮಾಡುವವರು, ಕೋಮು ಗಲಭೆಗಳಿಗೆ ಕಾರಣವಾಗುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಗುಪ್ತಚರ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿರುವುದು ಹೌದು ಎಂದ ಅವರು ಹೇಳಿದರು.
ಲ್ಲೆಯಲ್ಲಿ ನಡೆದ ಘಟನೆಗಳನ್ನು ನೋಡುವಾಗ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೋಮು ಶಕ್ತಿಗಳ ವಿರುದ್ಧದ ರಾಜ್ಯ ಸರಕಾರದ ದೃಷ್ಟಿಕೋನವನ್ನು ಪೊಲೀಸರು ಅರ್ಥ ಮಾಡಿಕೊಂಡಿಲ್ಲ ಅನ್ನಿಸುತ್ತಿದೆ. ಹೀಗಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ಮಾಡುವ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ನಡೆಸಿ ಮುಂದೆ ಇಂತಹ ಘಟನೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಲಿದ್ದಾರೆ ಎಂದು ಅವರು ಹೇಳಿದರು.
ಅಮಾಯಕ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಹಾಗೂ ಇನ್ನೋರ್ವ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನೋವು ತಂದಿದೆ. ಒಂದು ತಿಂಗಳ ಅವಧಿಯಲ್ಲಿ ಮೂರು ಕೊಲೆಗಳಾಗಿವೆ. ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲಾಗಿದೆ. ಪೊಲೀಸ್ ಇಲಾಖೆಯು ದ್ವೇಷ ಭಾಷಣ ಮಾಡಿ ಪ್ರಚೋದನೆ ನೀಡಿ, ಇಂತಹ ಕೃತ್ಯಕ್ಕೆ ಕಾರಣವಾಗುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬಾರದು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಸಂತ್ರಸ್ತ ಕುಟುಂಬದ ಮನೆಯವರನ್ನು ಇಂದು ಭೇಟಿಯಾಗಿ ಸಾಂತ್ವನ ಹೇಳಿದ್ದೇನೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಪಕ್ಷವಾಗಿದ್ದು, ಪಕ್ಷಕ್ಕೆ ರಾಜೀನಾಮೆ ನೀಡಿರುವ ಅಲ್ಪಸಂಖ್ಯಾತ ನಾಯಕರು, ಕಾರ್ಯಕರ್ತರನ್ನು ಸಮಾಧಾನ ಪಡಿಸುವ ಹಾಗೂ ಅವರ ಬೇಡಿಕೆಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕೆಲಸವಾಗಲಿದೆ ಎಂದು ಹೇಳಿದರು.
ಬ್ಲಾಕ್ ಅಧ್ಯಕ್ಷರಾದ ಜೆ. ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ, ಆರಿಫ್ ಬಾವ ಬಂದರ್, ವಿಕಾಸ್ ಶೆಟ್ಟಿ, ಎನ್ಎಸ್ಯಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ಪಿ. ಮನುರಾಜ್, ಭಾಸ್ಕರ ರಾವ್, ಮನಪಾ ಮಾಜಿ ಸದಸ್ಯ ಸತೀಶ್ ಪೆಂಗಲ್, ಮುಖಂಡರಾದ ನಝೀರ್ ಬಜಾಲ್ ಉಪಸ್ಥಿತರಿದ್ದರು.