
ಡೆಂಗ್ಯೂ ನಿಯಂತ್ರಣ-ಮುಂಜಾಗೃತಾ ಕ್ರಮಕ್ಕೆ ಸೂಚನೆ: ದಿನೇಶ್ ಗುಂಡೂರಾವ್
ಮಂಗಳೂರು: ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸ್ಪಷ್ಟಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಶುಕ್ರವಾರ ನಗರದ ಹೊಗೆ ಬಜಾರ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗ್ಯೂ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾಗಿವೆ. ಸಾರ್ವಜನಿಕರ ಸಹಕಾರದಿಂದ ಮಾತ್ರ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯಘಿ. ಪ್ರತಿಯೊಬ್ಬರೂ ತಮ್ಮ ಮನೆ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದರು.
ಡೆಂಗ್ಯೂ ಸ್ವಚ್ಛ ನೀರಿನಲ್ಲಿಯೇ ಹುಟ್ಟುವುದರಿಂದ ಸಾರ್ವಜನಿಕರು ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಾಗೃತಿ ಕಾರ್ಯವೂ ಆಗಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ನುಡಿದರು.
ಬಳಿಕ ಸಚಿವರು ಹೊಗೆ ಬಜಾರ್ನ ಧೂಮಾವತಿ ಕಂಪೌಂಡ್ ವ್ಯಪ್ತಿಯಲ್ಲಿ ನಡೆದ ಲಾರ್ವ ಸಮೀಕ್ಷೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಎಂಎಲ್ಸಿ ಐವನ್ ಡಿಸೋಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಉಪಸ್ಥಿತರಿದ್ದರು.