
ಛಲವಾದಿ ನಾರಾಯಣಸ್ವಾಮಿ ಅವರು ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ ಬೆಂಬಲಿಗರಿಂದ ದಿಗ್ಬಂಧನಕ್ಕೊಳಗಾದ ಘಟನೆ ಖಂಡನೀಯ: ಶಾಸಕ ಕಾಮತ್
Thursday, May 22, 2025
ಮಂಗಳೂರು: ಸಾಂವಿಧಾನಿಕ ಹುದ್ದೆಯಾದ ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲ್ಬುರ್ಗಿಯ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ ಬೆಂಬಲಿಗರಿಂದ ದಿಗ್ಬಂಧನಕ್ಕೊಳಗಾದ ಘಟನೆ ಅತ್ಯಂತ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಬಂದೊದಗಿದೆ ಎಂದರೆ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಯ ರಕ್ಷಣೆಯನ್ನು ನಿರೀಕ್ಷಿಸುವುದು ಹೇಗೆ? ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದ್ದು ಪ್ರಜಾಪ್ರಭುತ್ವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಅದನ್ನು ಸ್ವೀಕರಿಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಅದು ಬಿಟ್ಟು ಕಾಂಗ್ರೆಸ್ಸಿನ ಮಂತ್ರಿಗಳು ತಮ್ಮ ಗೂಂಡಾ ಪಡೆಯನ್ನು ಕಳುಹಿಸಿ ಬಿಜೆಪಿ ನಾಯಕರನ್ನು ಬೆದರಿಸಲು ಯತ್ನಿಸಿದರೆ ಅದಕ್ಕೆ ಹೆದರುವವರು ಯಾರೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಗೃಹ ಸಚಿವರಾದ ಪರಮೇಶ್ವರ್ ರವರು ಇದನ್ನು ಗಂಭೀರವಾಗಿ ಪರಿಗಣಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರು ಒತ್ತಾಯಿಸಿದರು.