
ಬಸ್ಸು, ಕಾರು ಢಿಕ್ಕಿ: ಮೂವರಿಗೆ ಗಾಯ, ಓರ್ವರ ಸ್ಥಿತಿ ಗಂಭೀರ
Tuesday, May 27, 2025
ಪುತ್ತೂರು: ಖಾಸಗಿ ಬನ್ನೊಂದು ವ್ಯಾಗನರ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ. ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಬಕ ಸಮೀಪದ ಮುರ ಜಂಕ್ಷನ್ ನಲ್ಲಿ ನಡೆದಿದೆ.
ಗಾಯಾಳುಗಳನ್ನು ಪುತ್ತೂರು ತಾಲೂಕಿನ ಪಡ್ನೂರು ಸಮೀಪದ ಅಂಡೆಪುಣಿ ನಿವಾಸಿ ಈಶ್ವರ್ ಭಟ್, ಅವರ ಪುತ್ರಿ ಅಪೂರ್ವ ಹಾಗೂ ಅಪೂರ್ವ ಅವರ ಪುಟಾಣಿ ಮಗು ಎಂದು ಗುರುತಿಸಲಾಗಿದೆ.
ಈಶ್ವರ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಕಾರ್ಯಕ್ರಮವಿದ್ದು,. ಅದಕ್ಕಾಗಿ ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ವ್ಯಾಗನರ್ ಕಾರಿನಲ್ಲಿ ಮನೆಗೆ ಕರೆತರುತ್ತಿದ್ದ ವೇಳೆ, ಮುರ ಜಂಕ್ಷನ್ ಬಳಿ ಪಡ್ನೂರಿಗೆ ತೆರಳುವ ಒಳರಸ್ತೆಗೆ ಕಾರನ್ನು ತಿರುಗಿಸುತ್ತಿದ್ದ ಸಂದರ್ಭದಲ್ಲಿ ಪುತ್ತೂರಿನಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಖಾಸಗಿ ಬಸ್ಸು ನಡುವೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಕಾರು ಹಲವು ಮೀಟರ್ ದೂರಕ್ಕೆ ಎಸೆಯಲ್ಪಟ್ಟು ನಜ್ಜುಗುಜ್ಜಾಗಿತ್ತು. ಕಾರಿನಿಳಗಡೆ ಸಿಲುಕಿದ್ದ ಮೂವರೂ ಗಾಯಗೊಂಡಿದ್ದರು.
ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಕಾರಿನಲ್ಲಿ ಆಗಮಿಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಇತರ ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದರು. ಗಾಯಾಳುಗಳ ಪೈಕಿ ಅಪೂರ್ವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಶ್ವ ಭಟ್ ಹಾಗೂ ಅವರ ಮೊಮ್ಮಗಳು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.