
ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್: ಖಂಡನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಿರಿಯರು, ನಮ್ಮೆಲ್ಲರ ಮಾರ್ಗದರ್ಶಕರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿರುವುದು ಖಂಡನೀಯ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದಲೇ ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರ ವಿರುದ್ಧ ನಿರಂತರವಾಗಿ ಕೇಸುಗಳು ದಾಖಲಾಗಿ, ಆತಂಕದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ.
ಪೊಲೀಸರು ಅರ್ಧರಾತ್ರಿ ಸಮಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಮನೆಯಲ್ಲಿರುವ ಸಂದರ್ಭದಲ್ಲಿಯೇ ಮನೆಗೆ ಹೋಗಿ ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ಅಮಾನವೀಯ ನಡವಳಿಕೆಯಾಗಿದ್ದು, ಪೊಲೀಸರ ಮೇಲೆ ಅಧಿಕಾರ ದುರ್ಬಳಕೆ ಮಾಡಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.
ಹಿಂದೂ ಪರ ಧ್ವನಿಗಳನ್ನು ಕೇಸುಗಳಿಂದ ದಮನಿಸೋಣ ಎಂಬ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಇದು ಯಾವತ್ತಿಗೂ ಸಾಧ್ಯವಲ್ಲ, ಹಾಗೆಯೇ ಸಹಿಸಬೇಕಾದುದೂ ಅಲ್ಲ. ಜಿಲ್ಲೆಯ ಶಾಂತಿಯುತ ಪರಿಸರವನ್ನು ಕಾಪಾಡಲು, ಇಂತಹ ರಾಜಕೀಯ ಪ್ರೇರಿತ ಪೊಲೀಸ್ ಅಕ್ರಮಗಳು ತಕ್ಷಣವೇ ನಿಲ್ಲಬೇಕು ಎಂದು ನಂದನ್ ಮಲ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.