
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಕೀಲರ ಸಂಘದ ಸಹಿ ಸಂಗ್ರಹ ಅಭಿಯಾನ
ಮಂಗಳೂರು: ಅಖಿಲ ಭಾರತ ವಕೀಲರ ಒಕ್ಕೂಟ (AILU) ರಾಜ್ಯ ಕರೆಯ ಅನ್ವಯ ಇಂದು ಅಖಿಲ ಭಾರತ ವಕೀಲರ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಅಖಿಲ ಭಾರತ ವಕೀಲರ ಒಕ್ಕೂಟದ ಜಿಲ್ಲಾ ಅಧ್ಯಕ್ಷರು ಮತ್ತು ಹಿರಿಯ ವಕೀಲರಾದ ಯಶವಂತ ಮರೋಳಿ, ಜಿಲ್ಲಾ ಉಪಾಧ್ಯಕ್ಷರಾದ ರಾಮಚಂದ್ರ ಬಬ್ಬುಕಟ್ಟೆ, ಕಾರ್ಯದರ್ಶಿಯಾದ ನಿತಿನ್ ಕುತ್ತಾರ್, ಪದಾಧಿಕಾರಿಗಳಾದ ಶಾಲಿನಿ ಮನೋಹರ್, ಮನೋಜ್ ವಾಮಂಜೂರು, ಸುನಂದ ಕೊಂಚಾಡಿ, ಚರಣ್ ಶೆಟ್ಟಿ ಪಂಜಿಮೊಗರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ AILU ಸಂಘಟನೆಯು ರಾಜ್ಯದಲ್ಲಿ ವಕೀಲರ ಮತ್ತು ಕಾನೂನು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಚರ್ಚಿಸಿ ಹಲವು ಬೇಡಿಕೆಗಳನ್ನು ಸರಕಾರದ ಮುದಿಡುತ್ತಿದೆ.
ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು. ಕಾನೂನು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳುವ ಮತ್ತು ಅವರ ಭವಿಷ್ಯವನ್ನು ಅಭದ್ರತೆಯಲ್ಲಿಡುವ ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ (AIBE) ರದ್ದು ಪಡಿಸಬೇಕು.
ಕಿರಿಯ ವಕೀಲರ ವೃತ್ತಿ ಆರಂಭದ ಬದುಕಿಗೆ ಪೂರಕವಾಗುವಂತೆ 2 ವರ್ಷಗಳ ಕಾಲ ಮಾಸಿಕ 10,000 ರೂ. ಸಹಾಯಧನ ನೀಡಬೇಕು. ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ 5 ಲಕ್ಷ ರೂ. ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ 10 ಲಕ್ಷ ರೂ.ಗಳ ಅನುದಾನ ಮಂಜೂರು ಮಾಡಬೇಕು. ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈಧ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು.
ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು.
ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ರಾಜ್ಯದಲ್ಲಿನ ಎಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಚೇಂಬರ್ಗಳನ್ನು ಸ್ಥಾಪಿಸಬೇಕು. ವ್ಯಾಪಕ ಭ್ರಷ್ಟಾಚಾರವನ್ನು ತಡೆದು ಕಂದಾಯದ ವಿಚಾರಗಳನ್ನು ಕಾನೂನು ಪಾಲನೆಗೆ ಒಗ್ಗಿಸಿಕೊಳ್ಳುವ ನಿಟ್ಟಿನಲ್ಲಿ ರೆವೆನ್ಯೂ ಎಸಿ, ಡಿಸಿ ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲಿ ವಿಚಾರಣೆ ನಡೆಯದೆ ಸಕ್ರಮವಾದ ತೀರ್ಪುಗಳು ಆಗದೆ ಇರುವದರಿಂದ ಕಂದಾಯ ಪ್ರಕಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು. ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು. ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು ಹಾಗೂ ಈಗಿರುವ ಅನುದಾನಿತ & ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರ್ಕಾರ ನಿಯಂತ್ರಣ ಮಾಡಬೇಕು. ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಕಛೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು.ವಕೀಲರ ಸಂಘದ/ ಪರಿಷತ್ತಿನ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ಅನುಸಾರ ಪ್ರಾತಿನಿತ್ಯ ನೀಡಬೇಕು ಎಂದು ಈ ಅಭಿಯಾನದ ಮೂಲಕ ಅಖಿಲ ಭಾರತ ವಕೀಲರ ಸಂಘವು ಒತ್ತಾಯಿಸುತ್ತಿದ್ದು ಈ ಅಭಿಯಾನದ ಬೇಡಿಕೆಗಳು ತಿಳಿಸಿರುವ ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದೆ ಇದ್ದಲ್ಲಿ ವಕೀಲರಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿ ನಮ್ಮ ನಡೆಯನ್ನು ವಿಧಾನಸೌಧ, ವಕೀಲರ ಪರಿಷತ್ಗಳ ಕಡೆ ನಡೆಸಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದೆ ಎಂದು ಅಖಿಲ ಭಾರತ ವಕೀಲರ ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಯಶವಂತ ಮರೋಳಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.