
ಸರ್ಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು: ವಿವೇಕ್ ಆಳ್ವ
ಕಾರ್ಕಳ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸಮಾಜದಲ್ಲಿ ಸವಾಲನ್ನು ಎದುರಿಸಬಲ್ಲವರು ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.
ಅವರು ಇಂದು ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ನೆಲ್ಲಿ, ಇಲ್ಲಿಯ ಮೊಕ್ತೇಸರ ಸುನಿಲ್ ಕೆ.ಆರ್. ಅವರು ರಾಷ್ಟ್ರೀಯತೆ ಮತ್ತು ಸಂಸ್ಕಾರವನ್ನು ಮೂಡಿಸುವ ಶಿಕ್ಷಣ ಅಗತ್ಯವಾಗಿದೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂದೀಪ್ ಕುಡ್ವ, ನ್ಯಾಯವಾದಿ ನಂದಿನಿ ಶೆಟ್ಟಿ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಅವಿನಾಶ್ ಎ. ಶೆಟ್ಟಿ ಉಪಸ್ಥಿತರಿದ್ದು, ಶುಭ ಹಾರೈಸಿದರು.
ನಿವೃತ್ತ ಮುಖ್ಯ ಶಿಕ್ಷಕ ವಸಂತ್ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಉಪನ್ಯಾಸಕ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲೆ ಸುಚೇತಾ ಕಾಮತ್ ವಂದಿಸಿದರು.