
ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ: ವಾಲ್ಟರ್ ನಂದಳಿಕೆ
ಮಂಗಳೂರು: ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದರು.
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾಧ್ಯಮದ ಸವಾಲುಗಳು ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.
ಇತ್ತೀಚೆಗೆ ಸಮೀಕ್ಷೆ ಯೊಂದರ ಪ್ರಕಾರ ಶೇ.೬೦ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.೬೩ರಷ್ಟು ಜನರು ಟಿ.ವಿ ನ್ಯೂಸ್ನ್ನು ನಂಬುವುದಿಲ್ಲ. ಶೇ.೮೯ ರಷ್ಟು ಮಂದಿ ಸಾಮಾಜಿಕ ಮಾಧ್ಯಮಗಳನ್ನು ಆನ್ಲೈನ್ ವೆಬ್ಸೈಟ್ಗಳನ್ನು ನಂಬುವುದಿಲ್ಲ ಎಂದವರು ತಿಳಿಸಿದ್ದಾರೆ.
ಮಾದ್ಯಮ ಕ್ಷೇತ್ರದಲ್ಲಿ ಡಿಜಿಟಲ್, ಕೃತಕ ಬುದ್ಧಿ ಮತ್ತೆಯ ತಂತ್ರಜ್ಞಾನದ ಪ್ರವೇಶವಾಗಿದೆ ಆದರೆ ಸೃಜನಶೀಲತೆ ಮೂಲಕ ಈ ಸವಾಲುಗಳನ್ನು ಎದುರಿಸಬಹುದು. ಮಾಧ್ಯಮಗಳು ಜನರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿಸುವ ಬಗ್ಗೆ ಹೆಚ್ಚು ಕಾರ್ಯ ಪ್ರವೃತ್ತವಾಗಬೇಕು ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್ ಯು.ಎಚ್. ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಈ ನಡುವೆ ಮಾಧ್ಯಮ ಕ್ಷೇತ್ರದ ತಳ ಮಟ್ಟದಲ್ಲಿ ಪತ್ರಿಕಾವಿತರಣೆ ನಡೆಸುತ್ತಿರುವವರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.
ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ ಕೆ. ಅವರನ್ನು ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದಕ್ಷಿಣ ಕನ್ನಡ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ, ಕುಮಾರನಾಥ್, ಕೆ.ವಿ. ಜಾರ್ಜ್ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.