ಧರ್ಮಸ್ಥಳ ಪ್ರಕರಣ: ಎಸ್ಐಟಿ ಮುಂದೆ ದೂರುದಾರ ಅನಾಮಿಕ ವ್ಯಕ್ತಿ ಹಾಜರು
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದ ಎದುರು ದೂರುದಾರ ಶನಿವಾರ ಹಾಜರಾಗಿದ್ದಾನೆ.
ಕದ್ರಿಯಲ್ಲಿರುವ ಐಬಿ ಕಚೇರಿಗೆ ದೂರುದಾರ ತನ್ನ ಪರ ವಕೀಲರ ಜೊತೆ ಆಗಮಿಸಿದ್ದಾನೆ. ಡಿಐಜಿ ಎಂ.ಎನ್.ಅನುಚೇತ್ ಸಮ್ಮುಖದಲ್ಲಿ ದೂರುದಾರನ ವಿಚಾರಣೆ ನಡೆಯುತ್ತಿದ್ದು, ವಿಚಾರಣೆಗೆ ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.
ಸಭೆ..
ಇದಕ್ಕೂ ಮೊದಲು ಐಬಿ ಕಚೇರಿಯಲ್ಲಿ ಡಿಐಜಿ ಎಂ.ಎನ್.ಅನುಚೇತ್, ತನಿಖಾಧಿಕಾರಿ ಜಿತೇಂದ್ರ ದಯಾಮ್ ಹಾಗೂ ದ.ಕ, ಉಡುಪಿ, ಉ.ಕ ಜಿಲ್ಲೆಗಳಿಂದ ನೇಮಿಸಲ್ಪಟ್ಟ ತನಿಖಾ ತಂಡದ
ಅಧಿಕಾರಿಗಳು ಸಭೆ ನಡೆಸಿದ್ದಾರೆ. ಇದರಲ್ಲಿ ಧರ್ಮಸ್ಥಳ, ಮೂಲ್ಕಿ, ಬೈಂದೂರು ಇನ್ಸ್ಪೆಕ್ಟರ್ಗಳು ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಠಾಣೆಗೆ ಭೇಟಿ..
ಎಸ್ಐಟಿ ಅಧಿಕಾರಿ ಜಿತೇಂದ್ರ ದಯಾಮ ಅವರು ಜು.೨೫ರಂದು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಡಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಅವರು ರಾತ್ರಿಯಾಗುತ್ತಲೇ ಪ್ರಕರಣದ ಕುರಿತಾದ ಮಾಹಿತಿ ಕಲೆಹಾಕುವ ಹಾಗೂ ಅದಕ್ಕೆ ಸಂಬಂಧಿಸಿದ ಕೇಸ್ ಫೈಲ್ ಪಡೆಯಲು ರಾತ್ರಿಯೇ ಆಗಮಿಸಿದ್ದಾರೆ. ಠಾಣೆಯ ಎಸ್.ಐ. ಸಮರ್ಥ್ ಆರ್.ಗಾಣಿಗೇರ್ ಜತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಿದ್ದೇನೆ ಎಂದು ಹೇಳಿರುವ ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ವಿಚಾರಣೆ ನಡೆದಿದೆ ಎನ್ನಲಾಗಿದೆ. ಅನಾಮಿಕ ವ್ಯಕ್ತಿಯ ಜೊತೆ ಬಂದಿರುವ ಇಬ್ಬರು ವಕೀಲರ ಪ್ರತ್ಯೇಕ ತನಿಖೆ ನಡೆದಿದೆ. ಅನಾಮಿಕ ದೂರುದಾರ ಈಗಾಗಲೇ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದು, ಈಗ ಮೊದಲ ಬಾರಿಗೆ ಎಸ್ಐಟಿಗ ಮಾಹಿತಿ ನೀಡಿದ್ದಾನೆ.
ತಾನು ಎಲ್ಲೆಲ್ಲಿ ಶವ ಹೂತಿಟ್ಟಿದ್ದೇನೆ ಎಂಬುದನ್ನು ಬಹಿರಂಗಪಡಿಸಲು ಸಿದ್ಧ ಅನಾಮಿಕ ದೂರುದಾರ ತಿಳಿಸಿದ್ದು, ಹೂತಿಟ್ಟ ಶವಗಳ ಮಹಜರಿಗೂ ಮುನ್ನ ಮಹತ್ವದ ತನಿಖೆ ನಡೆಯಲಿದೆ.
ತನಿಖಾ ತಂಡ..
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ತನಿಖೆಗೆ ರಾಜ್ಯ ಸರಕಾರವು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿದೆ. ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ. ತನಿಖಾ ತಂಡದಲ್ಲಿ ದ.ಕ, ಉಡುಪಿ, ಉ.ಕನ್ನಡ ಜಿಲ್ಲೆಗಳಿಂದ ನೇಮಿಸಲ್ಪಟ್ಟ ಅಧಿಕಾರಿಗಳಿದ್ದಾರೆ.