
ಎಸ್ಸಿಡಿಸಿಸಿ ಬ್ಯಾಂಕ್ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ
ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ಎಸ್ಸಿಡಿಸಿಸಿ ಬ್ಯಾಂಕ್ ಭಾಜನವಾಗಿದೆ.
ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ತೋರಿದ ಸಾರ್ವಂಗೀಣ ಪ್ರಗತಿಯೊಂದಿಗೆ ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ನೂರು ಮರುಪಾವತಿಯನ್ನು ಕಂಡಿದ್ದು, ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ:
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ೧೧೩ ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ಧಿಯ ಪಥದಲ್ಲಿರುವ ಎಸ್ಸಿಡಿಸಿಸಿ ಬ್ಯಾಂಕ್ ರಾಜ್ಯದ ಅತ್ಯುತ್ತಮ ಬ್ಯಾಂಕ್’ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಅಪೆಕ್ಸ್ ಬ್ಯಾಂಕ್ನ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಎಸ್ಸಿಡಿಸಿಸಿ ಬ್ಯಾಂಕ್ 23ನೇ ಬಾರಿ ತನ್ನದಾಗಿಸಿಕೊಂಡಿದೆ.
ಸೇವೆಯೇ ಮುಖ್ಯ ಧ್ಯೇಯ:
ಗ್ರಾಹಕರ ಸೇವೆಯನ್ನೇ ಮುಖ್ಯ ಧೈಯವನ್ನಾಗಿಟ್ಟುಕೊಂಡು ಯಶಸ್ಸಿನ ಪಥದಲ್ಲಿ ಮುನ್ನಡೆಯನ್ನು ಕಾಣುತ್ತಿರುವ ಎಸ್ಸಿಡಿಸಿಸಿ ಬ್ಯಾಂಕಿಗೆ ವರದಿ ವರ್ಷದಲ್ಲಿ ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ನಾಲ್ಕನೇ ಬಾರಿ ಲಭಿಸಿದೆ.
ಆ.13 ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.