ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ: ಕದಿರು ಕಟ್ಟುವುದು, ತೆನೆ ವಿತರಣೆ
ತೆನೆ ಮೆರವಣಿಗೆ:
ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ದರ್ಪಣತೀರ್ಥ ನದಿ ತೀರಕ್ಕೆ ತೆರಳಿದರು. ಬತ್ತದ ತೆನೆಗೆ ದರ್ಪಣತೀರ್ಥ ನದಿಯ ತಟದಲ್ಲಿ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಪ್ರಧಾನ ಅರ್ಚಕರು ಪೂಜೆ ನೆರವೇರಿಸಿದರು.
ತದನಂತರ ಅಲ್ಲಿ ಸೇರಿದ್ದ ಸಹಸ್ರಾರು ಭಕ್ತಾಧಿಗಳಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಕದಿರನ್ನು ವಿತರಿಸಿದರು. ಮಾರುದ್ದದ ಸರದಿಯ ಸಾಲಿನಲ್ಲಿ ನಿಂತು ಅಧಿಕ ಸಂಖ್ಯೆಯಲ್ಲಿ ಊರ ಭಕ್ತರು ಕದಿರ ಪ್ರಸಾದವನ್ನು ಸ್ವೀಕರಿಸಿದರು. ಬಳಿಕ ಹೊಸ್ತಾರೋಗಣೆಯ ಪ್ರಯುಕ್ತ ಶ್ರೀ ದೇವರಿಗೆ ಗರ್ಭಗುಡಿಯ ಎದುರಿನ ಮಂಟಪದಲ್ಲಿ ಪಂಚಾಮೃತ ಮಹಾಭಿಷೇಕ, ವಿಶೇಷ ಪೂಜೆ ಹಾಗೂ ನವಾನ್ನ ನೈವೇಧ್ಯ ಸಮರ್ಪಿತವಾಯಿತು. ಈ ಮೊದಲು ಶ್ರೀ ದೇವಳದಲ್ಲಿ ಮೂರು ತೆಂಗಿನ ಕಾಯಿ ಗಣಪತಿ ಹೋಮ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ. ಯೇಸುರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಪ್ರವೀಣ ರೈ ಮರುವಂಜ, ಅಜಿತ್ ಕುಮಾರ್, ಲೀಲಾ ಮನಮೋಹನ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಅಚ್ಚುತ್ತ ಗೌಡ ಬಳ್ಪ, ಬ್ರಹ್ಮರಥ ದಾನಿ ಅಜಿತ್ ಶೆಟ್ಟಿ ಕಡಬ, ಕೆ.ಎಂ. ಗೋಪಿನಾಥ್ ನಂಬೀಶ, ಶಿಷ್ಠಚಾರಾಧಿಕಾರಿ ಜಯರಾಮ ರಾವ್, ಹೆಬ್ಬಾರ್ ಪ್ರಸನ್ನ ಭಟ್ ಹಿರ್ತರಾ, ದೇವಳದ ಪಾಟಾಳಿ ಲೋಕೇಶ್ ಎ.ಆರ್ ಸೇರಿದಂತೆ ದೇವಳದ ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು.


