ಧರ್ಮಸ್ಥಳದಲ್ಲಿ ಜೈನಮಠಗಳ ಭಟ್ಟಾರಕರುಗಳಿಂದ ‘ಧರ್ಮ ಸಂರಕ್ಷಣಾ ಸಮಾವೇಶ’
ಸತ್ಯಕ್ಕೆ ಸದಾ ಜಯವಿದೆ. ಸತ್ಯಕ್ಕೆ ಸಾವಿಲ್ಲ. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆ ನಿಂತ ಧರ್ಮಸ್ಥಳದ ಕೀರ್ತಿಗೆ ಎಂದೂ ಚ್ಯುತಿ ಇಲ್ಲ: ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ
ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಹೆಗ್ಗಡೆಯವರು ಮಾನವ ಅಲ್ಲ, ದೇವಮಾನವ ಎಂದು ಬಣ್ಣಿಸಿದರು. ಧರ್ಮಸ್ಥಳವು ಸರ್ವಧರ್ಮೀಯರ ಮನೆಗಳನ್ನು ಹಾಗೂ ಮನಗಳನ್ನು ಬೆಳಗುವ ‘ನಂದಾದೀಪ’ವಾಗಿದೆ. ಅದನ್ನು ನಂದಿಸಲು ಹೋದರೆ ಧರೆಯ ಹೊತ್ತಿ ಉರಿಯಬಹುದು ಎಂದು ಭವಿಷ್ಯ ನುಡಿದರು.
ಶ್ರವಣಬೆಲಗೊಳ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ ಜೈನಧರ್ಮ ಮತ್ತು ಹಿಂದೂ ಧರ್ಮ ಸಮಗ್ರ ಸಮಾಜದ ಸಂಪರ್ಕ ಸೇತುವಾಗಿದೆ. ಹಿಂದೂಗಳನ್ನು ಮತ್ತು ಜೈನರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ೮೦೦ ವರ್ಷಗಳ ಹಿಂದೆ ತಮ್ಮ ವಾಸ್ತವ್ಯದ ಮನೆಯನ್ನೆ ಧರ್ಮದೇವತೆಗಳಿಗಾಗಿ ಬಿಟ್ಟುಕೊಟ್ಟವರು ಹೆಗ್ಗಡೆ ಪರಂಪರೆಯವರು. ಇಲ್ಲಿನ ಸರ್ವಧರ್ಮ ಸಮನ್ವಯ ಹಾಗೂ ಚತುರ್ವಿದ ದಾನ ಪರಂಪರೆ ವಿಶ್ವವಿಖ್ಯಾತವಾಗಿದೆ. ಧರ್ಮ ಮತ್ತು ಧರ್ಮಸ್ಥಳದ ಸಂರಕ್ಷಣೆ ತಾವೆಲ್ಲರೂ ಹೆಗ್ಗಡೆಯವರ ಜೊತೆ ಇದ್ದೇವೆ ಎಂದು ಸ್ವಾಮೀಜಿ ಭರವಸೆ ನೀಡಿದರು.
ತಮ್ಮ ಪೂರ್ವಾಶ್ರಮದಲ್ಲಿ ಉಜಿರೆಯಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾಗ ಸಿದ್ಧವನ ಗುರುಕುಲ ಹಾಗೂ ಪದವಿಪೂರ್ವ ಕಾಲೇಜು ಶಿಕ್ಷಣ ಹಾಗೂ ಸ್ವಯಂ ಸೇವಕನಾಗಿ ಕರ್ತವ್ಯ ನಿರ್ವಹಿಸಿರುವುದನ್ನು ಸ್ವಾಮೀಜಿ ಧನ್ಯತೆಯಿಂದ ಸ್ಮರಿಸಿದರು.
ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರ ಸಂರಕ್ಷಣೆಗಾಗಿ ಧರ್ಮಸ್ಥಳದ ವತಿಯಿಂದ ಮಾಡುತ್ತಿರುವ ಸೇವಾಕಾರ್ಯ ವಿಶ್ವಮಾನ್ಯವಾಗಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ಮಾಡಿದ ಗ್ರಾಮಾಭಿವೃದ್ಧಿ ಯೋಜನೆ, ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಆರೋಗ್ಯ, ಶಿಕ್ಷಣ ಮತ್ತು ಇತರ ಬಹುಮುಖ ಸೇವಾ ಕಾರ್ಯಗಳು ಸಾರ್ವಕಾಲಿಕ ಮೌಲ್ಯ ಹೊಂದಿವೆ ಎಂದರು.
ದೂರುದಾರನ ಸುಳ್ಳು ಮಾತು ಕೇಳಿ ತೆಗೆಸಿದ ಹೊಂಡಗಳಲ್ಲಿ ಗಿಡಗಳನ್ನಾದರೂ ನೆಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.
ಸೋಂದಾ ಮಠದ ಭಟ್ಟಾಕಳಂಕ ಸ್ವಮೀಜಿ ಮಾತನಾಡಿ, ಸತ್ಯವು ಸದಾ ಪರಿಶುದ್ಧವಾಗಿರುತ್ತದೆ. ಜೈನರು ಹಾಗೂ ಜೈನಧರ್ಮದ ಬಗ್ಯೆ ಎಂದೂ ಅವಹೇಳನ ಸಲ್ಲದು ಎಂದರು.
ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಧರ್ಮದಲ್ಲಿ ರಾಜಕೀಯ ಮಾಡಬಾರದು. ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಕಿವಿಮಾತು ಹೇಳಿದರು. ತಮಗೆ ಸ್ವಾಮೀಜಿ ಆಗಿ ಪಟ್ಟಾಭಿಷೇಕ ಆಗುವಾಗ “ಅಪೇಕ್ಷೆ ಪಡಬೇಡಿ, ಉಪೇಕ್ಷೆ ಮಾಡಬೇಡಿ’ ಎಂದು ಹೆಗ್ಗಡೆಯವರು ಹೇಳಿದ ಕಿವಿಮಾತನ್ನು ಸ್ವಾಮೀಜಿ ಧನ್ಯತೆಯಿಂದ ಸ್ಮರಿಸಿದರು.
ನಮ್ಮ ಸನಾತನ ಧರ್ಮ ಯಾವುದೇ ಜಾತಿ, ಮತಕ್ಕೆ ಸೀಮಿತವಲ್ಲ. ಧರ್ಮಸ್ಥಳದ ಬಗ್ಯೆ ಅಸೂಯೆಯಿಂದ ಅಪಪ್ರಚಾರ ಮಾಡುವವರು ‘ಮಾನಸಿಕ ಭಯೋತ್ಪಾದಕರು’ ಎಂದು ಸ್ವಾಮೀಜಿ ಬಣ್ಣಿಸಿದರು.
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ರಾಜಸ್ಥಾನದ ತಿಜಾರ ಮಠದ ಸೌರಭಸೇನ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿ ಜೈನಮಠದ ವೃಷಭಸೇನ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ವರೂರು ಜೈನಮಠದ ಧರ್ಮಸೇನ ಭಟ್ಟಾರಕ ಸ್ವಾಮೀಜಿ ಶುಭ ಹಾರೈಸಿ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಜೊತೆ ಸದಾ ತಾವೆಲ್ಲರೂ ಸೇವೆಗೆ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಭಾದ್ರಪದ ಮಾಸದಲ್ಲಿ ದಶಲಕ್ಷಣ ಪರ್ವ ಆಚರಣೆಯ ಶುಭಾವಸರದಲ್ಲಿ ಎಲ್ಲಾ ಮಠಾಧೀಶರುಗಳ ದರ್ಶನ ಭಾಗ್ಯ ಲಭಿಸಿರುವುದು ಅತೀವ ಸಂತಸವಾಗಿದೆ ಎಂದರು.
ಸತ್ಯ, ಅಹಿಂಸೆ, ತ್ಯಾಗ, ಬ್ರಹ್ಮಚರ್ಯ ಇತ್ಯಾದಿ ದಶಧರ್ಮಗಳನ್ನು ಜೈನರು ನಿತ್ಯವೂ ಪಾಲಿಸುತ್ತಾರೆ. ಇಂತಹ ಪವಿತ್ರಪರ್ವದ ಸಂದರ್ಭದಲ್ಲಿ ಎಲ್ಲಾ ಭಟ್ಟಾರಕರುಗಳು ತಮಗೆ ಹಾಗೂ ಧರ್ಮಸ್ಥಳಕ್ಕೆ ಬೆಂಬಲ ನೀಡಿ, ನಿಮ್ಮ ಜೊತೆ ಸದಾ ಇದ್ದೇವೆ ಎಂದು ಭರವಸೆ ನೀಡಿರುವುದು ತಮಗೆ ಹೆಚ್ಚಿನ ಉತ್ಸಾಹ ಮತ್ತು ಪ್ರೇರಣೆ ನೀಡಿದೆ ಎಂದು ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದರು.
ತತ್ವ, ಸಿದ್ಧಾಂತ, ಧರ್ಮ ಇರುವುದು ಕೇವಲ ಓದಲು, ಉಪದೇಶಕ್ಕೆ ಮಾತ್ರ ಅಲ್ಲ. ಅದನ್ನು ನಾವು ನಿತ್ಯವೂ ಪಾಲಿಸಬೇಕು. ‘ಸಮ್ಯಕ್ದರ್ಶನ, ಜ್ಞಾನ ಚಾರಿತ್ರಾಣಿ ಮೋಕ್ಷ ಮಾರ್ಗಃ’ ಎಂಬುದು ಜೈನ ಧರ್ಮದ ಸಾರವಾಗಿದೆ. ಅಂದರೆ ಸರಿಯಾದ ತತ್ವ ಸಿದ್ಧಾಂತಗಳ ಬಗ್ಯೆ ನಂಬಿಕೆ, ತಿಳುವಳಿಕೆ (ಜ್ಞಾನ) ಮತ್ತು ಆಚರಣೆಯಿಂದ ಮೋಕ್ಷಪ್ರಾಪ್ತಿಯಾಗುತ್ತದೆ ಎಂಬುದು ಜೈನ ಸಿದ್ಧಾಂತವಾಗಿದೆ. ಇದರ ಪ್ರತೀಕವಾಗಿ ಮೂರು ಎಳೆಗಳಿರುವ ಜನಿವಾರ (ಯಜ್ಞೋಪವೀತ) ವನ್ನು ಜೈನರು ಧರಿಸುತ್ತಾರೆ. ಇಂತಹ ಸಾತ್ವಿಕ ಹಾಗೂ ನೈತಿಕ ಜೀವನದಿಂದ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿ ಹೆಗ್ಗಡೆಯವರು ಎಲ್ಲಾ ಭಟ್ಟಾರಕರುಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರೀಯಾ ಹರ್ಷೇಂದ್ರ ಕುಮಾರ್, ಶ್ರದ್ಧಾಅಮಿತ್, ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.