ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕನಿಗೆ ಗಂಭೀರ ಗಾಯ
Sunday, September 7, 2025
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ಸೊಂದರ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಾಟಿಯ ಎರಡನೇ ತಿರುವಿನ ಬಳಿ ಈ ಅಪಘಾತ ಸಂಭವಿಸಿದೆ. ಕೊಟ್ಟಿಗೆಹಾರ ಕಡೆ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯು ಉಜಿರೆ ಕಡೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯ ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಲಾರಿ ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ.
ಘಟನೆಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಸುಮಾರು ಎರಡು ತಾಸು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ವಾಹನ ಸವಾರರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಸೇರಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕೈಗೊಂಡರು. ಅಪಘಾತ ಸ್ಥಳದಲ್ಲಿ ಮೊಬೈಲ್ ನೆಟ್ವರ್ಕ್ ಸಿಗದ ಕಾರಣ ಮಾಹಿತಿ ತಿಳಿಸಲು ತಡವಾಯಿತು. ರವಿವಾರವಾದ ಕಾರಣ ಘಾಟಿ ಪರಿಸರದಲ್ಲಿ ಹೆಚ್ಚಿನ ವಾಹನ ಸಂಚಾರವು ಇತ್ತು.