ಯೋಗ್ಯತೆ ಬರುವುದು ವಯಸ್ಸಿನಿಂದ ಅಲ್ಲ ಸಂಸ್ಕಾರದಿಂದ: ಉಜಿರೆ ಅಶೋಕ್ ಭಟ್
ಸಂಸ್ಕಾರವೆಂಬುದು ಕಲೆ, ಯೋಗ, ಬಾಂಧವ್ಯ, ಶಿಕ್ಷಣ, ವ್ಯಕ್ತಿತ್ವ ಎಲ್ಲದರ ಮಿಶ್ರಣ. ಕಲೆ ಬದುಕನ್ನು ಕಟ್ಟಲು ಕಲಿಸುತ್ತದೆ. ಮಕ್ಕಳನ್ನು ಬೆಳೆಸುವುದು ಒಂದು ಕಲೆ, ಆ ಕಲೆಗೆ ರೂಪ ನೀಡುವುದೇ ಸಂಸ್ಕಾರ. ಮನೆಯ ಹಬ್ಬದಿಂದ ಹಿಡಿದು ಊರಿನ ಜಾತ್ರೆಗಳಿಗೂ ಮಕ್ಕಳನ್ನು ಕರೆದೊಯ್ದು ಸಂತೆ ತಿರುಗಿಸದೆ ಗರ್ಭಗುಡಿಗೆ ಪ್ರದಕ್ಷಿಣೆ ಹಾಕಿಸಿ ಸಂತರನ್ನಾಗಿ ಮಾಡುವ ಜವಾಬ್ದಾರಿ ಪೋಷಕರ ಮೇಲಿದೆ.ಕುಟುಂಬವೆಂಬ ಪರಿಕಲ್ಪನೆ ಬಹಳ ಮೌಲ್ಯಯುತವಾದುದು, ಪ್ರಪಂಚದಲ್ಲಿ ಕುಟುಂಬದ ಪರಿಕಲ್ಪನೆ ಭಾರತವನ್ನು ಮಹತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ. ಈ ಪರಿಕಲ್ಪನೆಯ ಮೂಲವೇ ಅವಲಂಬನೆ, ಕೌಟುಂಬಿಕ ಅವಲಂಬನೆಯಿಂದ ಸಂಸ್ಕಾರದ ಬೆಳವಣಿಗೆಯಾಗುತ್ತದೆ. ಅದರ ಬೆಳವಣಿಗೆಗೆ ನಮ್ಮ ಹಬ್ಬ, ಶಾಸ್ತ್ರೀಯ ಕಲೆಗಳ ಮೂಲಗಳನ್ನು ಕೆಡಿಸದೆ ಮುಂದಿನ ಪೀಳಿಗೆಗೆ ನೀಡಬೇಕಿದೆ ಎಂದರು.
ಸಮಾಜದ ಪರಿವರ್ತನೆಯ ಬೃಹತ್ ಕಲ್ಪನೆ ಖಾವಂದರದ್ದು, ಇಂದಿನ ಭಾರತೀಯ ಜ್ಞಾನ ಪರಂಪರೆ, ಆತ್ಮನಿರ್ಭರ ಭಾರತ, ಸ್ವದೇಶಿ ಪ್ರಜ್ಞೆ, ರಾಷ್ಟ್ರೀಯ ಶಿಕ್ಷಣ ನೀತಿ, ಕೌಟುಂಬಿಕ ಪ್ರಜ್ಞೆ ಇಂತಹ ವಿವಿಧ ರಚನಾತ್ಮಕ ಕಾರ್ಯಗಳು ಹಲವು ವರುಷಗಳ ಹಿಂದೆಯೇ ಅವರಿಂದ ಅನುಷ್ಠಾನಕ್ಕೆ ಬಂದಿದೆ. ನನ್ನ ಪ್ರಕಾರ ಖಾವಂದರು ಆಧ್ಯಾತ್ಮಿಕ ಲೋಕದ ಪ್ರಧಾನಿ ಎಂದು ಪ್ರಶಂಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಭಜನಾ ಕಮ್ಮಟಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ಕಣಿಯೂರಿನ ಮಾರುತಿಪುರದ ರೈತಬಂಧು ಮಾಲಕ ಶಿವಶಂಕರ್ ನಾಯಕ್, ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.
ಪೂರ್ಣಿಮಾ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.
ಖ್ಯಾತ ಗಾಯಕಿ ಬೆಂಗಳೂರಿನ ಅರ್ಚನಾ ಉಡುಪ ಶಿಬಿರಾರ್ಥಿಗಳಿಗೆ ಭಜನೆ ಹಾಡುವ ಬಗ್ಗೆ ತರಬೇತಿ ನೀಡಿದರು.


