ಅ.27-ನ.2: ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಟೂರ್ನಮೆಂಟ್-2025’
ಮಂಗಳೂರು: ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಅ.27ರಿಂದ ನ.2ರ ವರೆಗೆ ‘ಚೀಫ್ ಮಿನಿಸ್ಟರ್ಸ್’ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಟೂರ್ನಮೆಂಟ್-2025’ ನಡೆಯಲಿದೆ. ಪಂದ್ಯಾಕೂಟ ಆಯೋಜನೆಗೆ ಒಟ್ಟು 2.75 ಕೋ.ರೂ. ವೆದಾಜಿಸಲಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಈಗಾಗಲೇ 1 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಮತ್ತು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ನಡೆಯುವ ಈ ಪಂದ್ಯಾಕೂಟದ ಪೂರ್ವಭಾವಿ ಸಭೆ ರವಿವಾರ ಮಂಗಳೂರಿನಲ್ಲಿ ನಡೆದಿದ್ದು, ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನುದಾನವನ್ನು ಜಿಲ್ಲೆಯ ವಿವಿಧ ಸಾರ್ವಜನಿಕ ವಲಯಗಳ ಸಂಸ್ಥೆಗಳು, ಬ್ಯಾಂಕ್ಗಳು, ಖಾಸಗಿ ಸಂಸ್ಥೆಗಳಿಂದ ಪ್ರಾಯೋಜಕತ್ವದ ಮೂಲಕ ಹೊಂದಿಸಿಕೊಳ್ಳುವ ಅಗತ್ಯವಿದೆ ಎಂದರು.
ಪಂದ್ಯಾವಳಿಗೆ ಒಂದು ತಿಂಗಳ ಕಾಲಾವಕಾಶವಿದ್ದು, ಒಳಾಂಗಣ ಕ್ರೀಡಾಂಗಣದಲ್ಲಿರುವ ಸಣ್ಣ ಪುಟ್ಟನ್ಯೂನ್ಯತೆಗಳನ್ನು ಸರಿಪಡಿಸಬೇಕು ಎಂದು ಸ್ಮಾರ್ಚ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕ್ರೀಡಾಪಟುಗಳಿಗೆ ವಸತಿ, ಆಹಾರ, ವೈದ್ಯಕೀಯ ವ್ಯವಸ್ಥೆ, ಕ್ರೀಡಾಂಗಣಕ್ಕೆ ಬೇಕಾದ ಗಾಳಿ ಬೆಳಕು, ಕ್ರೀಡಾಕೂಟದ ಪ್ರಚಾರ, ಸ್ವಚ್ಛತೆ ಇತ್ಯಾದಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಜಿಲ್ಲಾ ಪಂಚಾಯತ್, ಮೆಸ್ಕಾಂ, ಪ್ರವಾಸೋದ್ಯಮ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ ಸಹಿತ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ, ಕ್ರೀಡಾಕೂಟಕ್ಕೆ ಪ್ರೇಕ್ಷಕರಾಗಿ ವಿವಿಧ ಶಾಲೆ-ಪಪೂ ಕಾಲೇಜುಗಳ ಮಕ್ಕಳನ್ನು ಕರೆಸುವ ವ್ಯವಸ್ಥೆ ಮಾಡಬೇಕು. ಉದ್ಘಾಟ ನೆಯ ಮುನ್ನಾದಿನ ಅಥವಾ ಸಮಾರೋಪ ಕಾರ್ಯಕ್ರಮವನ್ನು ಕಡಲ ಕಿನಾರೆಯಲ್ಲಿ ಆಯೋಜಿಸಬೇಕು ಎಂದು ಆಸೋಸಿಯೇಶನ್ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ದ.ಕ. ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಮಾತನಾಡಿ, ಇದೊಂದು ಗ್ಲೋಬಲ್ ರಾರಯಂಕಿಂಗ್ ಸ್ಪರ್ಧೆಯಾಗಿದ್ದು, 450ಕ್ಕೂ ಅಧಿಕ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಕ್ರೀಡಾಪಟುಗಳು ಭಾಗವಹಿಸಲಿದ್ದು, 120ಕ್ಕೂ ಅಧಿಕ ತಾಂತ್ರಿಕ ಅಧಿಕಾರಿಗಳು, 8 ದಿನದಲ್ಲಿ 15 ಸಾವಿರಕ್ಕೂ ಅಧಿಕ ಪ್ರೇಕ್ಷಕರು, ಭಾಗವಹಿಸಲಿದ್ದಾರೆ. ಜತೆಗೆ ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟ, ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ, ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯಿಂದ 100ಕ್ಕೂ ಅಧಿಕ ಪಾದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಅಪರ ಜಿಲ್ಲಾಧಿಕಾರಿ ರಾಜು, ಜಿಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ, ಪಾಲಿಕೆ ಆಯಕ್ತ ರವಿಚಂದ್ರ ನಾಯ್?ಕ, ಸ್ಮಾರ್ಚ್ ಸಿಟಿ ಎಂ.ಡಿ. ಡಾ. ಜಿ.ಸಂತೋಷ್ ಕುಮಾರ್, ಮುಡಾ ಆಯುಕ್ತ ಮುಹಮ್ಮದ್ ನಝೀರ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್, ಅಸೋಸಿಯೇಶನ್ ಕಾರ್ಯದರ್ಶಿ ಸುಪ್ರೀತ್ ಆಳ್ವ, ಉಪಾಧ್ಯಕ್ಷ ಅಶೋಕ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಎಂಆರ್ಪಿಎಲ್, ಕೆಸಿಸಿಐ, ಕ್ರೆಡೈ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.