ಮಕ್ಕಳನ್ನು ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಿ: ಯು.ಟಿ. ಖಾದರ್

ಮಕ್ಕಳನ್ನು ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಿ: ಯು.ಟಿ. ಖಾದರ್


ಮಂಗಳೂರು: ವಿದ್ಯಾರ್ಥಿಗಳು ದೇಶದ ಪರಂಪರೆ ಉಳಿಸಿಕೊಂಡು ಹೋಗುವಂತೆ ಮಾಡುವಲ್ಲಿ ಶಿಕ್ಷಕರ ಶ್ರಮ ಅಗತ್ಯ. ಮಕ್ಕಳನ್ನು ತಂದೆ, ತಾಯಂದಿರ ಮಾತ್ರವಲ್ಲದೆ ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಬೇಕಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಮತ್ತು ಶಿಕ್ಷಕರ ದಿನದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಶಿಕ್ಷಕರಿಗೆ ಇರುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಚರ್ಚಿಸಿ ಪರಿಹಾರ ಕಲ್ಪಿಸಲಾಗುವುದು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಹಾಗೂ ಜೀವಿಸಲು ಭಾರತದಂತಹ ಅತ್ಯುತ್ತಮ ದೇಶ ಇನ್ನೊಂದಿಲ್ಲ ಎನ್ನುವುದನ್ನು ಮಕ್ಕಳಿಗೆ ತಿಳಿಹೇಳುವ ಕಾರ್ಯ ಶಿಕ್ಷಕರು ಮಾಡಬೇಕು ಎಂದು ಹೇಳಿದರು. 

ದಿಕ್ಸೂಚಿ ಭಾಷಣದಲ್ಲಿ ಮಂಗಳೂರು ಶಿಕ್ಷಣ ಶಿಕ್ಷಕರ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಿವಪ್ರಕಾಶ್ ಮಾತನಾಡಿ, ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಎಲ್ಲವೂ ಸರಿಯಿದೆ ಎನ್ನುವಂತಿಲ್ಲ. ಕೇರಳ ಶಾಲೆಗಳಲ್ಲಿ ಶಿಕ್ಷಕರು ನಿವೃತ್ತರಾದ ಮರುದಿನವೇ ಹೊಸ ಶಿಕ್ಷಕರ ನೇಮಕ ಆಗುತ್ತದೆ, ಆದರೆ ಕರ್ನಾಟಕದಲ್ಲಿ 70 ಸಾವಿರಕ್ಕೂ ಅಧಿಕ ಶಿಕ್ಷಕ ಹುದ್ದೆ ಖಾಲಿಯಿದೆ.  ಶಿಕ್ಷಕರ ಸಮಸ್ಯೆ ನೀಗಿಸಲು ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳದ ಅಧಿಕಾರಶಾಹಿಗಳ ನಿರ್ಲಕ್ಷ್ಯತನದಿಂದ ಸಮಸ್ಯೆ ಉಂಟಾಗಿದೆಯೇ ಹೊರತು ಸರ್ಕಾರಗಳನ್ನು ದೂರಿ ಪ್ರಯೋಜನವಿಲ್ಲ ಎಂದರು.  

ಈ ಸಂದರ್ಭ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ರಾಧಾಕೃಷ್ಣ ರೈ ಹಾಗೂ ನಯನಾ ಕೆ. ಇವರನ್ನು ಸನ್ಮಾನಿಸಲಾಯಿತು. 56 ಮಂದಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. 

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಶಾಸಕ ವೇದವ್ಯಾಸ ಕಾಮತ್, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪಂಚಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ರಫೀಕ್ ತುಂಬೆ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಸಿಬಿಎಸ್ಸಿ ಶಾಲಾ ಉಸ್ತುವಾರಿ ನವಾಝ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಕಡ್ತಲ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಗೀತಾ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷೆ ಪ್ರಮೀಳಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಧಾಕೃಷ್ಣ ರಾವ್ ಮತ್ತಿತರರು ಉಪಸ್ಥಿತರಿದ್ದರು. 

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ಸ್ವಾಗತಿಸಿ, ಬಿಆರ್‌ಪಿ ತಹಸೀನ ಸನ್ಮಾನಪತ್ರ ವಾಚಿಸಿದರು. ಪ್ರಭಾರ ಸಮನ್ವಯಾಧಿಕಾರಿ ಸುಶ್ಮಾ ವಿ. ಕಿಣಿ ವಂದಿಸಿದರು. ಶಿಕ್ಷಕರಾದ ರಾಜೀವ ನಾಯಕ್ ಹಾಗೂ ಜಯಶ್ರೀ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article