ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಅ.27ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆ ಸುಜಾತ ಭಟ್ ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು. ಉಳಿದ ನಾಲ್ಕು ಮಂದಿ ಗಿರೀಶ್ ಮಟ್ಟಣ್ಣವರ್, ಸೌಜನ್ಯ ಮಾವ ವಿಠಲ್ ಗೌಡ, ಜಯಂತ್ ಟಿ, ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಿರಲಿಲ್ಲ.
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಮಧ್ಯಾಹ್ನ ಬಂದ ನಾಲ್ಕು ಮಂದಿಯ ಪರ ವಕೀಲರಾದ ಅಂಬಿಕಾ ಪ್ರಭು ಅವರು ಎಸ್.ಐ.ಟಿ ವಿಚಾರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದು, ಉಳಿ ದಂತೆ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡರಿಗೆ ನಾಲ್ಕು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಲಾಗಿದೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.