ಬೂತ್ ಮಟ್ಟದಿಂದ ಕಾಂಗ್ರೆಸ್ ಬಲವರ್ಧನೆ: ವಿನಯ ಕುಮಾರ್ ಸೊರಕೆ
ಮಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ನ್ನು ಬೂತ್ ಮಟ್ಟದಿಂದ ಬಲಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ್ನು ಸಮೂಹ ಆಧಾರಿತ ಪಕ್ಷ (ಮಾಸ್ ಬೇಸ್ಡ್ ಪಾರ್ಟಿ)ದಿಂದ ಕೇಡರ್ ಆಧಾರಿತ ಪಕ್ಷವನ್ನಾಗಿ ಪರಿವರ್ತಿಸುವ ಕಾರ್ಯವನ್ನು ವ್ಯವಸ್ಥಿತವಾಗಿ ಆರಂಭಿಸಿದ್ದೇವೆ. ಬಿಜೆಪಿಯು ಕೇಡರ್ ಆಧಾರಿತ ಪಕ್ಷ. ಅವರನ್ನು ಮಣಿಸಲು ನಾವು ಕೂಡ ಆ ದಿಕ್ಕಿನಲ್ಲಿ ಪಕ್ಷ ಸಂಘಟನೆಯನ್ನು ಬೇರು ಮಟ್ಟದಲ್ಲಿ ಬಲಪಡಿಸಲು ತೀರ್ಮಾನಿಸಿದ್ದೇವೆ ಎಂದರು.
ಪಕ್ಷವನ್ನು ಬಲಪಡಿಸುವ ನಿಟ್ಟಿನ ಭಾಗವಾಗಿ ಕಾಂಗ್ರೆಸ್ ಪ್ರಚಾರ ಸಮಿತಿಗೆ ಪಂಚಾಯತ್, ವಾರ್ಡ್ ಮಟ್ಟದ ಸಮಿತಿಗಳ ನೇಮಕ, ಅದೇ ರೀತಿ ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲೂ ತಲಾ 23 ಪದಾಧಿಕಾರಿಗಳನ್ನು ನೇಮಿಸಲು ಸುತ್ತೋಲೆ ಹೊರಡಿಸಲಾಗಿದೆ. ಕಾಂಗ್ರೆಸ್ನ್ನು ಬಲಪಡಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಏಜೆಂಟರನ್ನು ನೇಮಿಸಲಾಗುತ್ತಿದೆ. ಅಲ್ಲದೆ ಕಾರ್ಯಕರ್ತರಿಗೆ ತರಬೇತಿ ನೀಡಿ ಅಣಿಗೊಳಿಸಲಿದ್ದೇವೆ. ಬೂತ್ ಮಟ್ಟದಲ್ಲಿ ಸಾರ್ವಜನಿಕರನ್ನು ಪರಿಣಾಮಕಾರಿಯಾಗಿ ತಲುಪಲು ಪ್ರತಿ ಬೂತ್ಗೆ ಇಬ್ಬರು ಡಿಜಿಟಲ್ ಯೂತ್ ನೇಮಕ ಮಾಡಲಾಗುತ್ತಿದೆ ಎಂದು ಸೊರಕೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಎಲ್. ಹನುಮಂತಯ್ಯ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮಾಜಿ ಶಾಸಕ ಜೆ.ಆರ್. ಲೋಬೊ, ಮುಖಂಡರಾದ ಡೆನಿಸ್ ಡಿಸಿಲ್ವ, ಸುಧೀರ್, ಮುನೀರ್ ಜನ್ಸಾಲೆ, ಆದರ್ಶ್ ಯಲ್ಲಪ್ಪ ಉಪಸ್ಥಿತರಿದ್ದರು.