ಸಿದ್ದರಾಮಯ್ಯನವರೇ ಮುಂದೆಯೂ ಮುಖ್ಯಮಂತ್ರಿ ಆಗಿರುತ್ತಾರೆ: ಬಿ.ಕೆ. ಹರಿಪ್ರಸಾದ್
ಮಂಗಳೂರು: ‘ಪವರ್ ಶೇರಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಲು ನಾನು ಸಂಬಂಧಪಟ್ಟವನಲ್ಲ. ಈ ಬಗ್ಗೆ ಕೆ.ಸಿ.ವೇಣುಗೋಪಾಲ್ ಅಥವಾ ಬೆಂಗಳೂರಿನಲ್ಲಿರುವ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೇಳಬಹುದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿ.3ರಂದು ಮಂಗಳೂರಿನಲ್ಲಿ ನಡೆಯುವ ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಹಾಗಾಗಿ ಈ ಊಹಾಪೋಹಗಳು ಬೇಡ’ ಎಂದು ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಹೇಳಿದ್ದಾರೆ.
ನಗರದಲ್ಲಿ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
‘ಮತ ಕಳ್ಳತನ’ ಅಭಿಯಾನದ ಭಾಗವಾಗಿ ರಾಮ್ ಲೀಲಾ ಮೈದಾನದಲ್ಲಿ ಡಿ.14ರಂದು ಕಾರ್ಯಕ್ರಮ ನಡೆಯಲಿದೆ. ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಯಾವ ರೀತಿಯಲ್ಲಿ ತಪ್ಪು ದಾರಿಯಲ್ಲಿ ನಡೆದಿದೆ ಎಂಬ ಕುರಿತಂತೆ ಅಭಿಯಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಈಗಾಗಲೇ 1.4 ಕೋಟಿ ಸಹಿ ಸಂಗ್ರಹ ನಡೆದಿದ್ದು, ದೇಶದ ವಿವಿಧ ರಾಜ್ಯಗಳಿಂದ ಒಟ್ಟು 5 ಕೋಟಿ ಸಹಿ ಸಂಗ್ರಹವನ್ನು ಆ ದಿನ ರಾಷ್ಟ್ರಪತಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.