ಬೈಂದೂರು ಮಾಜಿ ಶಾಸಕರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ
ಕುಂದಾಪುರ: ಬೆಂಗಳೂರಿನಲ್ಲಿ ಮಂಗಳವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ವಾರಾಹಿ ಯೋಜನೆ ಕುರಿತು ಸಮಾಲೋಚನೆ ನಡೆಸಿದರು.
ವಾರಾಹಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಅವರು ಸಿ.ಎಂ ಮತ್ತು ಡಿಸಿಎಂ ಭೇಟಿ ಮಾಡಿ ಚರ್ಚಿಸಿದರು. ಜೊತೆಗೆ
ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರು.
ಪ್ರಸ್ತುತ ನಡೆಸಲು ಉದ್ದೇಶಿಸಿರುವ ಸ್ಥಳದಲ್ಲಿ ಕಾಮಗಾರಿ ಮುಂದುವರೆಸುವುದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟ ಅವರು, ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆದುಕೊಂಡು ಈಗಾಗಲೇ ಸೂಚಿತವಾಗಿರುವ ಪ್ರದೇಶಗಳಿಗೆ ನೀರುಣಿಸಲು, ಆದ್ಯತೆಯ ನೆಲೆಯಲ್ಲಿ ಏತ ನೀರಾವರಿ ಯೋಜನೆಯನ್ನು ಪರಿಗಣಿಸುವಂತೆ ಮನವಿ ಮಾಡಿದರು.
ಮಾಜಿ ಶಾಸಕರ ಮನವಿಗೆ ಸಿಎಂ ಹಾಗೂ ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಶೀಘ್ರದಲ್ಲೇ ವಾರಾಹಿ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಆಡಳಿತ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಹರೀಶ್ ತೋಳಾರ್ ಹಾಗೂ ಇತರ ಅಧಿಕಾರಿಗಳು ಇದ್ದರು.