ಜ.2ರಂದು ‘ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸಮಾರೋಪ’
ಮಂಗಳೂರು: ಯುನಿವೆಫ್ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ‘ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸಮಾರೋಪ ಸಮಾರಂಭ ಜ.2ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಬುಧವಾರ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಯಾನದ ಸಂಚಾಲಕ ಯು.ಕೆ. ಖಾಲಿದ್ ಅವರು, ಸಂಜೆ 6.45ಕ್ಕೆ ನಡೆಯುವ ಸಮಾರಂಭದಲ್ಲಿ ಶೋಷಿತ ಸಮಾಜ ಮತ್ತು ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ವಿಶ್ವಧರ್ಮಪೀಠದ ಜಯಬಸವಾನಂದ ತಪೋವನದ ಡಾ. ಶ್ರೀ ಜಯಬಸವಾನಂದ ಸ್ವಾಮೀಜಿ, ಸಿ.ಆರ್.ಐ ಅಧ್ಯಕ್ಷ ಹಾಗೂ ಧರ್ಮಗುರು ವಂ. ಡಾ. ಡೊಮಿನಿಕ್ ವಾಸ್, ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಜನಾಬ್ ಅಬ್ದುಸ್ಸಲಾಮ್ ಪುತ್ತಿಗೆ ಅವರು ವಹಿಸಲಿದ್ದಾರೆ. ಸಮಾರಂಭದಲ್ಲಿ ಸದ್ಭಾವನಾ ವೇದಿಕೆ ಜಪ್ಪು ಇದರ ಅಧ್ಯಕ್ಷ ಹಾಗೂ ಯೋಗಗುರು ದಿವಾನ್ ಕೇಶವ ಭಟ್, ಎಸ್ ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಮ್, ಅಭಿಯಾನ ಸಂಚಾಲಕ ಯು.ಕೆ. ಖಾಲಿದ್ ಮತ್ತು ಕಾರ್ಯದರ್ಶಿ ಮುಹಮ್ಮದ್ ಸೈಪುದೀನ್ ಭಾಗವಹಿಸಲಿದ್ದಾರೆ. ಮಹಿಳೆಯರಿಗೆ ಪ್ರತ್ಯೇಕ ಸ್ಥಳಾವಕಾಶ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಹ ಸಂಚಾಲಕರಾದ ಮಹಮ್ಮದ್ ಆಸಿಫ್, ಉಬೈದುಲ್ಲಾ ಬಂಟ್ವಾಳ್, ಸದಸ್ಯ ಅಬ್ದುಲ್ ರಶೀದ್, ಸಯೀದ್ ಅಹ್ಮದ್, ಶೇಖ್ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು.