ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ: ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದರು
ಈ ರೈಲು ಮಾರ್ಗದ ವಿದುದ್ದೀಕರಣ ಕಾರ್ಯ ಪೂರ್ಣಗೊಂಡಿರುವುದರಿಂದ ಬೆಂಗಳೂರು ಹಾಗೂ ಮಂಗಳೂರು ನಡುವಿನ ರೈಲು ಸಂಪರ್ಕ ಜಾಲ ಮಟ್ಟಷ್ಟು ಸುಧಾರಣೆಯಾಗಲಿದ್ದು, ಪ್ರಯಾಣಿಕರ ಸಂಚಾರದ ಜತೆಗೆ ಮಂಗಳೂರಿಗೆ ಸರಕು ಸಾಗಣೆ ಜತೆಗೆ ಬಂದರು ಹಾಗೂ ವ್ಯಾಪಾರ ಚಟುವಟಿಕೆಗಳ ವೃದ್ಧಿಗೂ ಮತ್ತಷ್ಟು ಅನುಕೂಲ ಕಲ್ಪಿಸಲಿದೆ. ಆ ಮೂಲಕ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಅತ್ಯಂತ ಪ್ರಮುಖ ರೈಲ್ವೆ ಮೂಲಸೌಕರ್ಯ ಸುಧಾರಿಸುವ ಬೇಡಿಕೆ ಈಡೇರಿದೆ ಎಂದು ಸಂಸತ ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಹಾಗೂ ಈ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ವಿಶೇಷ ಆಸಕ್ತಿ ವಹಿಸಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮತ್ತು ತಾಂತ್ರಿಕ ಸವಾಲುಗಳ ನಡುವೆಯೂ ಈ ಐತಿಹಾಸಿಕ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಶ್ರಮಿಸಿದ ಎಲ್ಲ ರೈಲ್ವೆ ಅಧಿಕಾರಿ ವರ್ಗಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಂಸದ ಕ್ಯಾ. ಚೌಟ ಅವರು ತಿಳಿಸಿದ್ದಾರೆ.
ಸಂಸದ ಕ್ಯಾ. ಚೌಟರ ಸತತ ಪ್ರಯತ್ನಕ್ಕೆ ಸಿಕ್ಕಿದ ಯಶಸ್ಸು:
ಅಧಿಕಾರ ವಹಿಸಿಕೊಂಡ ದಿನದಿಂದಲೂ ಮಂಗಳೂರು-ಬೆಂಗಳೂರು ರೈಲ್ವೆ ಸಂಪರ್ಕ ಜಾಲ ಸುಧಾರಣೆ ಮಾಡುವುದು ಸಂಸದ ಕ್ಯಾ. ಚೌಟರ ಪ್ರಮುಖ ಆದ್ಯತೆಯಾಗಿತ್ತು. ಅದರಂತೆ ಅವರು ಸಚಿವಾಲಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ಅಂದರೆ, 2024ರ ಜುಲೈ 10ರಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚೌಟ ಅವರು ಪಡೀಲ್-ಸುಬ್ರಹ್ಮಣ್ಯ-ಸಕಲೇಶಪುರ ಮಾರ್ಗದ ದ್ವಿಪಥ ಹಾಗೂ ವಿದ್ಯುದ್ದೀಕರಣಗೊಳಿಸುವ ಬೇಡಿಕೆಗಳ ಬಗ್ಗೆ ವಿವರವಾದ ಮನವಿ ಸಲ್ಲಿಸಿದ್ದರು. 2024ರ ಡಿಸೆಂಬರ್ 11ರಂದು ಲೋಕಸಭೆಯಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯಡಿ ಅವರು, ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಪರ್ಕದ ಸಾಮರ್ಥ್ಯ, ವೇಗ ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿದ್ದರು.
ಇದಕ್ಕೆ ಉತ್ತರಿಸಿದ್ದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಮಂಗಳೂರು-ಬೆಂಗಳೂರು ಮಾರ್ಗವು ಪ್ರಯಾಣಿಕರ ಮತ್ತು ಸರಕು ಸಾಗಣೆಯ ದೃಷ್ಟಿಯಿಂದ ವ್ಯೂಹಾತ್ಮಕವಾಗಿ ಅತ್ಯಂತ ಪ್ರಮುಖ ರೈಲ್ವೆ ಜಾಲ. ಭಾರತೀಯ ರೈಲ್ವೆಯ ರಾಷ್ಟ್ರವ್ಯಾಪಿ ವಿದ್ಯುದ್ದೀಕರಣ ಯೋಜನೆಯಡಿ ಈ ಮಾರ್ಗದಲ್ಲಿ ವಿದ್ಯುದ್ದೀಕರಣ, ಸಾಮರ್ಥ್ಯ ವೃದ್ಧಿ ಮತ್ತು ಮೂಲಸೌಕರ್ಯ ಮೇಲ್ದರ್ಜೆಗೇರಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಘಾಟ್ ವಿಭಾಗವೂ ಸೇರಿದಂತೆ ಸಮಗ್ರ ಮಾರ್ಗದ ಆಧುನೀಕರಣದ ಪ್ರಯತ್ನಗಳ ಬಗ್ಗೆ ಸಚಿವರು ತಿಳಿಸಿದ್ದರು.