ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಿ: ಡಾ. ತಿಪ್ಪೇಸ್ವಾಮಿ

ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಿ: ಡಾ. ತಿಪ್ಪೇಸ್ವಾಮಿ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖೆಗಳು ಸಮನ್ವಯನಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಸೂಚಿಸಿದ್ದಾರೆ. 

ಅವರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮತ್ತು ಮಕ್ಕಳ ಮತ್ತು  ಹದಿಹರೆಯದವರ ಕಾರ್ಮಿಕ ಪದ್ದತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ರ ಅನುಷ್ಠಾನದ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವ ಸ್ಥಳಗಳನ್ನು ಗುರುತಿಸಲು ಮತ್ತು ತಪಾಸಣೆ ನಡೆಸಲು ಅಧಿಕಾರಿಗಳಿಗೆ  ವಿವಿಧ ಇಲಾಖೆಗಳು ಸಹಕರಿಸಬೇಕು. ಬಾಲಕಾರ್ಮಿಕ ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಿ ಬದುಕು ರೂಪಿಸಲು ನೆರವಾಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ 1098 ಸಂಖ್ಯೆ ಪ್ರದರ್ಶಿಸಬೇಕು ಎಂದು ಹೇಳಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಟಾಸ್ಕ್ ಫೊರ್ಸ್ ಸಮಿತಿ ಸಭೆಗಳನ್ನು 3 ತಿಂಗಳಿಗೊಮ್ಮೆ ಆಯೋಜಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳಲ್ಲಿ ಮಕ್ಕಳ ಕಾವಲು ಸಮಿತಿ  ಕಡ್ಡಾಯವಾಗಿ ರಚಿಸಬೇಕು  ಮತ್ತು ಸಲಹಾ ಸಮಿತಿ ಸಭೆಗಳನ್ನು  ಮಾಡಬೇಕು. ವಿವಿಧ  ಇಲಾಖೆಗಳ ಸಹಯೋಗದಲ್ಲಿ ಬಾಲಕಾರ್ಮಿಕ ನಿಷೇಧ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು. 

ಹೋಟೆಲ್, ಅಂಗಡಿ, ಕಾರ್ಖಾನೆಗಳಲ್ಲಿ ಅಥವಾ ಇನ್ನಿತರ ಉದ್ಯೋಗ ಸ್ಥಳಗಳಲ್ಲಿ  ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುವುದರ ಜೊತೆಗೆ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ, ಕುಟುಂಬಕ್ಕೆ ಆರ್ಥಿಕ ಭದ್ರತೆ ಕಲ್ಪಿಸಲು  ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. ರಕ್ಷಿಸಲ್ಪಟ್ಟ ಬಾಲಕಾರ್ಮಿಕರನ್ನು  ಶಾಲೆಗೆ ಸೇರಿಸಿ ಅವರಿಗೆ ಶಿಕ್ಷಣ ನೀಡಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಕಾರ್ಮಿಕ ಅಧಿಕಾರಿ ವಿಲ್ಮಾ, ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನಾ  ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article