ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ: ಹರೀಶ್ ಕುಮಾರ್
Monday, January 26, 2026
ಮಂಗಳೂರು: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರ್ಕಾರಗಳು ಮಾಡಬೇಕು. ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಪ್ರಜಾಪ್ರಭುತ್ವದಿಂದ ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಳಸಬೇಕು. ರಾಜ್ಯ ಕಾಂಗ್ರೆಸ್ ಸರಕಾರ ಸಂವಿಧಾನದ ಆಶಯದಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮಸಮಾಜ ನಿರ್ಮಾಣಕ್ಕೆ ಪಣತೊಟ್ಟಿದೆ. ಸಂವಿಧಾನ ಮತ್ತು ಅದರ ಆಶಯಗಳನ್ನು ರಕ್ಷಿಸಲು ಕಾಂಗ್ರೆಸ್ ಸದಾ ಸಿದ್ಧವಾಗಿದೆ ಎಂದು ಹೇಳಿದರು.
ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದು, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದರು. ಈಗ ಈ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೊ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಕೆ.ಕೆ. ಶಾಹುಲ್ ಹಮೀದ್, ಅಪ್ಪಿ ಎಸ್., ಉಷಾ ಅಂಚನ್, ದಿನೇಶ್ ಮುಳೂರು, ಮುಖಂಡರಾದ ಜಯಶೀಲ ಅಡ್ಯಂತಾಯ, ಡೆನ್ನಿಸ್ ಡಿಸಿಲ್ವ, ನೀರಜ್ ಚಂದ್ರಪಾಲ್, ಟಿ.ಕೆ. ಸುಧೀರ್, ನವೀನ್ ಡಿಸೋಜಾ, ಶುಭೋದಯ ಆಳ್ವ, ಭಾಸ್ಕರ್ ರಾವ್, ಶಬ್ಬೀರ್ ಎಸ್., ಅಶೋಕ್ ಡಿ.ಕೆ., ನಮಿತಾ ಡಿ. ರಾವ್, ಮಂಜುಳ ನಾಯಕ್, ರಮಾನಂದ ಪೂಜಾರಿ, ಆಲ್ವಿನ್ ಪ್ರಕಾಶ್, ಮೋಹನ್ ದಾಸ್ ಕೊಟ್ಟಾರಿ, ಕೃಷ್ಣ ಶೆಟ್ಟಿ, ಪ್ರೇಮ್, ದುರ್ಗ ಪ್ರಸಾದ್, ರವಿರಾಜ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿಸೋಜ ಧ್ವಜ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದರು.


