ವಿನಯ ಹೆಗ್ಡೆ ಅವರ ಆದರ್ಶ ಸಮಾಜಕ್ಕೆ ಪ್ರೇರಣಾದಾಯಿ: ಸಿಎ ಶಾಂತಾರಾಮ ಶೆಟ್ಟಿ
ಮಂಗಳೂರು: ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ವಿನಯ ಹೆಗ್ಡೆ ಅವರ ಆದರ್ಶಯುತ ಬದುಕು ಸಮಾಜಕ್ಕೆ ಸದಾ ಪ್ರೇರಣಾದಾಯಿ. ಸಾಧನೆಯ ಜತೆಗೆ ತನ್ನ ಸರಳ ನಡವಳಿಕೆಯಿಂದ ಅವರು ಜನಮಾನಸದಲ್ಲಿ ಗೌರವದ ಸ್ಥಾನ ಪಡೆದಿದ್ದಾರೆ ಎಂದು ದ.ಕ. ಜಿಲ್ಲಾ ರೆಡ್ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ಇತ್ತೀಚೆಗೆ ಅಗಲಿದ ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ನಿಟ್ಟೆ ವಿನಯ ಹೆಗ್ಡೆ ಅವರಿಗೆ ದ.ಕ. ಜಿಲ್ಲಾ ರೆಡ್ಕ್ರಾಸ್ ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿದರು.
ದ.ಕ. ಜಿಲ್ಲಾ ರೆಡ್ಕ್ರಾಸ್ನ ಸಮಾಜ ಸೇವಾ ಕಾರ್ಯಗಳಿಗೆ ವಿನಯ ಹೆಗ್ಡೆ ಅವರು ನೀಡಿದ ಪ್ರೋತ್ಸಾಹ ಸದಾ ಸ್ಮರಣೀಯ ಎಂದರು.
ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ದ.ಕ. ಜಿಲ್ಲಾ ರೆಡ್ಕ್ರಾಸ್ ಸಮಿತಿಯ ಉಪಾಧ್ಯಕ್ಷ ಡಾ. ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ. ಸುಮನಾ ಬಿ., ಪಿ.ಬಿ. ಹರೀಶ್ ರೈ ನುಡಿ ನಮನ ಸಲ್ಲಿಸಿದರು.
ನಿಟ್ಟೆ ಪರಿಗಣಿತ ವಿ.ವಿ.ಯ ಯೂತ್ ರೆಡ್ಕ್ರಾಸ್ನ ನೋಡಲ್ ಅಧಿಕಾರಿ ಡಾ. ಶಂತನು ಸಹ, ರೆಡ್ಕ್ರಾಸ್ ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಗುರುದತ್ ನಾಯಕ್, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.