ಮೂಡುಬಿದಿರೆಯಲ್ಲಿ ನಾಳೆಯಿಂದ ಭಾರತೀಯ ಸೇನಾ ನೇಮಕಾತಿ ರ್ಯಾಲಿ
ಶುಕ್ರವಾರ ಬೆಳಗ್ಗೆ 3 ಗಂಟೆಯಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ರಾಜ್ಯದ 11 ಜಿಲ್ಲೆಗಳಿಂದ ಪ್ರತಿದಿನ ಸುಮಾರು ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಒಟ್ಟು 10 ದಿನಗಳ ಅವಧಿಯಲ್ಲಿ ಸುಮಾರು 15,000 ಅಭ್ಯರ್ಥಿಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಗ್ನಿಪಥ್ ನ ನೋಡೆಲ್ ಅಧಿಕಾರಿ ಶ್ರೀಧರ ಮುಂದಲಮನಿ ತಿಳಿಸಿದ್ದಾರೆ.
ನೇಮಕಾತಿ ರ್ಯಾಲಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಪೂರ್ಣ ಸಹಕಾರ ನೀಡುತ್ತಿದ್ದು, ವಿದ್ಯಾಗಿರಿ ಆವರಣದಲ್ಲಿ ವಸತಿ ವ್ಯವಸ್ಥೆ, ಸ್ವಯಂಸೇವಕರ ನಿಯೋಜನೆ, ಸಿಂಥೆಟಿಕ್ ಟ್ರ್ಯಾಕ್ನಲ್ಲಿ ರನ್ನಿಂಗ್ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಆಳ್ವಾಸ್ 150 ಮಂದಿ ಎನ್ಸಿಸಿ, ಎನ್ಎಸ್ಎಸ್ ಸ್ವಯಂಸೇವಕರು, 25 ಸಿಬ್ಬಂದಿಗಳು ರ್ಯಾಲಿಗೆ ಶ್ರಮಿಸುತ್ತಿದ್ದಾರೆ.
ವಿದ್ಯಾಗಿರಿಯಲ್ಲಿ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಕುಡಿಯುವ ನೀರು, ಶೌಚಾಲಯ, ಆರೋಗ್ಯ ಸೇವೆ, ಸಂಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ ಆಹಾರ ವಸ್ತುಗಳನ್ನು ಸರ್ಕಾರ ಒದಗಿಸಿದ್ದು, ಶುಚಿರುಚಿಯಾಗಿ ಆಳ್ವಾಸ್ನ ತಂಡ ತಯಾರಿಸಲಿದೆ ಎಂದು ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಮಾಹಿತಿ ನೀಡಿದ್ದಾರೆ.
