ಬ್ರಹ್ಮರಕೂಟ್ಲು ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಸಮಾಲೋಚನಾ ಸಭೆ: ಮಾ.3 ರಂದು ಬ್ರಹ್ಮರಕೂಟ್ಲು ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಸಾಮೂಹಿಕ ಧರಣಿ
Thursday, February 19, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ಗೇಟ್ಗಳನ್ನು ತೆರೆಯಲು ಸಿದ್ದತೆಗಳು ಬಿರುಸುಗೊಳ್ಳುತ್ತಿರುವಂತೆಯೆ ಬಿ.ಸಿ. ರೋಡ್ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಸಮಾಲೋಚನಾ ಸಭೆ ನಡೆಸಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಟೋಲ್ಗೇಟ್ ತೆರವಿಗೆ ನಡೆಸಬೇಕಾದ ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ಮಾಡಿದರು.
ಸಭೆಯ ಕೊನೆಯಲ್ಲಿ ‘ಬ್ರಹ್ಮರಕೂಟ್ಲು ಟೋಲ್ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ’ ರಚಿಸಲು, ಬ್ರಹ್ಮರಕೂಟ್ಲು ಟೋಲ್ಗೇಟ್ ತೆರವುಗೊಳ್ಳುವವರೆಗೂ ಅವಿರತ ಹೋರಾಟ ನಡೆಸಲು ಸಭೆ ನಿರ್ಧರಿಸಿತು.
ಹೋರಾಟ ಸಮಿತಿಗೆ ಬಿ. ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ. ಶೇಖರ್ ಹಾಗೂ ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮುಂದಿನ ದಿನದಲ್ಲಿ ಸಮಾನ ಮನಸ್ಕರಾದ ಎಲ್ಲರನ್ನು ಒಳಗೊಂಡ ಸಮಾವೇಶ ನಡೆಸಿ ಪೂರ್ಣಪ್ರಮಾಣದ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಮಾ.3 ರಂದು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಬ್ರಹ್ಮರಕೂಟ್ಲುನಲ್ಲಿ ಸಾಮೂಹಿಕ ಧರಣಿ
ಬ್ರಹ್ಮರಕೂಟ್ಲು ಟೋಲ್ಗೇಟ್ ತೆರವಿಗೆ ಒತ್ತಾಯಿಸಿ ನೂತನ ಸಮಿತಿ ವತಿಯಿಂದ, ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾ.3 ರಂದು ಬ್ರಹ್ಮರಕೂಟ್ಲು ಟೋಲ್ಗೇಟ್ ಸಮೀಪ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೃಹತ್ ಸಾಮೂಹಿಕ ಧರಣಿ ನಡೆಸುವುದಾಗಿ ಸಭೆ ತೀರ್ಮಾನಿಸಿತು. ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರತರವಾದ ಹೋರಾಟ ಸಂಘಟಿಸುವುದು, ಟೋಲ್ಗೇಟ್ ತೆರವುಗೊಳಿಸಿಯೇ ವಿಶ್ರಮಿಸುವುದು ಎಂದು ಸಭೆ ಘೋಷಿಸಿತು.


