ನಾನು ಮುಖ್ಯಮಂತ್ರಿಯಾಗಬೇಕೆಂಬ ಕನಸು ಜನರಿಗೂ ಇದೆ: ಡಿ.ಕೆ. ಶಿವಕುಮಾರ್
ಮಂಗಳೂರು: ‘ನಾನು ಮುಖ್ಯಮಂತ್ರಿಯಾಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಆದರೆ ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು" ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮದವರೊಂದಿಗೆಎ ಮಾತನಾಡಿದ ಅವರು, ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂಬ ಪ್ರಶ್ನೆಗೆ "ಸಮಯವೇ ಉತ್ತರ ನೀಡಲಿದೆ" ಎಂದರು.
ದಲಿತ ಸಂಘಟನೆಗಳು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ" ಎಂದರು.
ಮೆಟ್ರೋ ದರ ಏರಿಕೆ ಕೇಳಿಲ್ಲ.
"ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ" ಎಂದು
"ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ" ಎಂದು ತಿಳಿಸಿದರು.
ಮೌನಕ್ಕೆ ಮೊರೆ..
ಪುತ್ತೂರಿನಲ್ಲಿ ಶುಕ್ರವಾರ ರಾತ್ರಿ ನಡೆದ ಕಾಂಗ್ರೆಸ್ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆ ಮೊಳಗಿದೆ.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಎಂಟು ತಿಂಗಳಲ್ಲಿ ಕಾಂಗ್ರೆಸ್ ಭವನ ಪೂರ್ಣಗೊಳ್ಳಲಿದೆ. ಆಗ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಇದನ್ನು ಉದ್ಘಾಟಿಸುತ್ತಾರೆ ಎಂದರು.
ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಎಂದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಒಂದು ಹೆಜ್ಜೆ ಮಾತ್ರ ಬಾಕಿ ಇದೆ ಎಂದರು. ಇಷ್ಟೆಲ್ಲ ನಡೆದರೂ ಡಿ.ಕೆ.ಶಿವಕುಮಾರ್ ಮಾತ್ರ ಮೌನಕ್ಕೆ ಮೊರೆ ಹೋಗಿದ್ದರು.