ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರಿಗೆ ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಭಿನಂದನೆ
Saturday, February 28, 2026
ಮಂಗಳೂರು: ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರುಗಳ ಅಧಿಕಾರ ಅವಧಿ ಮುಗಿದಿದ್ದು ಇದೀಗ ಸರಕಾರ ಮುಂದಿನ ಆದೇಶದವರೆಗೆ ಹಾಲಿ ಅಧ್ಯಕ್ಷರುಗಳನ್ನೇ ಮರು ನೇಮಿಸಿದೆ. ಈ ಮೂಲಕ ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸದಾಶಿವ ಉಳ್ಳಾಲ್ ಅವರು ಮುಡಾ ಅಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ.
ಅಧ್ಯಕ್ಷರಾಗಿ ಮರು ನೇಮಕಗೊಂಡಿರುವ ಸದಾಶಿವ ಉಳ್ಳಾಲ್ ಅವರನ್ನು ಶನಿವಾರ ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಅಭಿನಂದಿಸಿದರು.
ಸಹಕಾರ ಕ್ಷೇತ್ರದಲ್ಲಿ ನಿಷ್ಠಾವಂತ ಸೇವೆಯನ್ನು ಸಲ್ಲಿಸುತ್ತಿರುವ ಸದಾಶಿವ ಉಳ್ಳಾಲ್ ಅವರು ಮುಡಾ ಅಧ್ಯಕ್ಷರಾಗಿ ಎರಡು ವರ್ಷಗಳ ಅಧಿಕಾರ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದು, ಇದೀಗ ಮುಂದಿನ ಅಧಿಕಾರ ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯುತ್ತಿರುವುದರಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಅವರಿಂದ ನಡೆಯಲಿ ಎಂದು ಡಾ. ಎಂ.ಎನ್. ರಾಜೇಂದ್ರಕುಮಾರ್ ಶುಭ ಆಶಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ನ ಮೆನೇಜಿಂಗ್ ಟ್ರಸ್ಟಿ ಮೇಘರಾಜ್ ಜೈನ್ ಉಪಸ್ಥಿತರಿದ್ದರು.