ಪಿಲಿಕುಳ ಪ್ರಾಣೆಗಳ ಸಾವಿಗೆ ‘ಸ್ಲೋ ಪಾಯಿಸನಿಂಗ್’ ಕಾರಣ..?
ಮಂಗಳೂರು: ಪ್ರಾಣಿಗಳ ಅಸಹಜ ಸಾವು, ಆಹಾರ ಪೂರೈಕೆಯಲ್ಲಿ ವ್ಯತ್ಯಯ, ಪ್ರಾಣಿಗಳ ವಿನಿಮಯ- ಲೆಕ್ಕಪತ್ರ ಅವ್ಯವಹಾರ ಸೇರಿದಂತೆ ವಿವಿಧ ರೀತಿಯ ಅಪರಾತಪರಾಗಳ ಕಾರಣಕ್ಕೆ ಕಳೆದ ಹಲವು ವರ್ಷಗಳಿಂದ ಪಿಲಿಕುಳ ಜೈವಿಕ ಉದ್ಯಾನವನ ಸುದ್ದಿಯಾಗುತ್ತಿದೆ.
ಸುಮಾರು ನಾಲ್ಕು ವರ್ಷ ಗಳಿಂದ ಹುಲಿ, ಜಿಂಕೆ, ಕಡವೆ, ಹಂದಿ ಸೇರಿದಂತೆ 100ಕ್ಕೂ ಅಧಿಕ ಪ್ರಾಣಿಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಇದೆ.
ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ ನೀಡುವ ಆಹಾರವನ್ನು ಪರಿಶೀಲಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇತ್ತೀಚೆಗೆ ಸಾವನ್ನಪ್ಪಿದ ಜಿಂಕೆಯೊಂದರ ಮರಣೋತ್ತರ ವರದಿಯಲ್ಲಿ ಪ್ರಾಣಿಯ ದೇಹದಲ್ಲಿ ಹೈಡ್ರೋಸೈನೇಡ್ ಹಾಗೂ ನೈಟ್ರೇಟ್ ಅಂಶಗಳು ಪತ್ತೆಯಾಗಿರುವುದು ಬೆಚ್ಚಿಬೀಳಿಸುವ ಸಂಗತಿಯಾಗಿದೆ.
ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಪ್ರಯೋಗಾಲಯದಿಂದ ಬಂದ ವರದಿ ಪ್ರಕಾರ, ಮೃಗಾಲಯದಲ್ಲಿ ಎಲೆಕೋಸು ಮತ್ತು ಹೂಕೋಸು ಬೆಳೆಗಳಲ್ಲಿ ಬಳಸುವ ಅತಿಯಾದ ಕೀಟನಾಶಕ ಅವಶೇಷಗಳನ್ನು ಸರಿಯಾಗಿ ಶುಚಿಗೊಳಿಸದೇ ಪ್ರಾಣಿಗಳಿಗೆ ನೀಡಲಾಗುತ್ತಿತ್ತು ಎನ್ನಲಾಗಿದೆ. ಈ ವಿಷಕಾರಿ ಅಂಶಗಳು ನಿಧಾನವಾಗಿ ದೇಹದಲ್ಲಿ ಸಂಗ್ರಹವಾಗಿ ‘ಸ್ಲೋ ಪಾಯಿಸನಿಂಗ್’ ಮೂಲಕ ಸಾವಿಗೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಹುಲಿ, ಜಿಂಕೆ, ಸಾಂಬಾರ್, ಕಾಡುಹಂದಿ ಸೇರಿದಂತೆ ಅನೇಕ ಪ್ರಾಣಿಗಳು ಮೃತಪಟ್ಟಿದ್ದು, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನಿರ್ಲಕ್ಷ್ಯವೇ ಇದಕ್ಕೆ ಕಾರಣವೇ ಎಂಬ ಪ್ರಶ್ನೆ ಮೂಡಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.