ತೃತೀಯ ಐಚ್ಚಿಕ ಭಾಷೆಯಾಗಿ ಶಾಲೆಗಳಲ್ಲಿ ‘ಬ್ಯಾರಿ’: ಮುಂದಿನ ಶೈಕ್ಷಣಿಕ ವರ್ಷದಿಂದ ಅಳವಡಿಸುವಂತೆ ಮನವಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಲೆಗಳಲ್ಲಿ ೬ನೇ ತರಗತಿಯಿಂದ ತೃತೀಯ ಐಚ್ಚಿಕ ಭಾಷೆಯಾಗಿ ‘ತುಳು’ ಮತ್ತು ‘ಕೊಂಕಣಿ’ ಭಾಷೆಗಳನ್ನು ಅನೇಕ ವರ್ಷಗಳಿಂದ ಕಲಿಸಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ‘ಬ್ಯಾರಿ’ ಭಾಷೆಯನ್ನೂ ಅಳವಡಿಸುವಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಸರ್ಕಾರಕ್ಕೆ ಮನವಿ ಮಾಡಿದೆ.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಮನವಿ ಸಲ್ಲಿಸಿದ್ದು, ಸಚಿವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.
ಬ್ಯಾರಿ ಭಾಷೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ೬ನೇ ತರಗತಿಯಿಂದ ತೃತೀಯ ಐಚ್ಚಿಕ ಭಾಷೆಯಾಗಿ ಅಳವಡಿಸಬೇಕೆಂಬ ಬೇಡಿಕೆಯನ್ನು ಈ ಹಿಂದಿನ ಅವಧಿಗಳಲ್ಲಿ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಶಿಕ್ಷಣ ಇಲಾಖೆಯ ಆಯುಕ್ತರು, ನಿರ್ದೇಶಕರು ಸೇರಿ ಈಗಾಗಲೇ ಜಿಲ್ಲೆಯಾದ್ಯಂತ ಇಲಾಖೆಯ ಉಪನಿರ್ದೇಶಕರ ಮುಖಾಂತರ ಜಿಲ್ಲೆಯ ಎಲ್ಲ ಶಾಲೆಗಳ ಅಭಿಪ್ರಾಯ ಸಂಗ್ರಹಿಸಿದ್ದು, ಈ ಬಗ್ಗೆ ಸಕಾರಾತ್ಮಕವಾದ ಅಭಿಪ್ರಾಯವನ್ನು ಸರ್ಕಾರಕ್ಕೆ ನೀಡಿರುತ್ತಾರೆ.
ಹಲವು ಸುತ್ತಿನ ತಜ್ಞರ ಸಮಿತಿಯ ಸಭೆಯು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮುಂದಿನ ಶೈಕ್ಷಣಿಕ ವರ್ಷದಿಂದ ಬ್ಯಾರಿ ಭಾಷೆಯನ್ನು ಶಾಲೆಗಳಲ್ಲಿ ಅಳವಡಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನವನ್ನು ಮುಂದುವರಿಸಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.