ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ‘ಪ್ರೀತಿಯ ಸಖ್ಯ’ ವಿಶೇಷ ಕಾರ್ಯಕ್ರಮ
ಸಂವಾದದಲ್ಲಿ ಮಾತನಾಡಿದ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು, ಪ್ರೀತಿ ಎನ್ನುವುದು ವ್ಯಾಖ್ಯಾನಕ್ಕೆ ಸಿಗದ ವಿಶಾಲ ಭಾವನೆ. ಅದು ಸ್ವಾರ್ಥರಹಿತವಾಗಿದ್ದು, ಅನುಭವದ ಮೂಲಕವೇ ಅದರ ಸಾರ್ಥಕತೆಯನ್ನು ಅರಿಯಲು ಸಾಧ್ಯ ಎಂದು ಹೇಳಿದರು. ಕುವೆಂಪು, ಬೇಂದ್ರೆ, ಪುತಿನ ಹಾಗೂ ಕೆ.ಎಸ್. ನರಸಿಂಹಸ್ವಾಮಿ ಮುಂತಾದ ಕವಿಗಳು ಪ್ರೀತಿಯನ್ನು ವಿಭಿನ್ನ ರೀತಿಯಲ್ಲಿ ಸಾಹಿತ್ಯದಲ್ಲಿ ಚಿತ್ರಿಸಿರುವುದನ್ನು ವಿವರಿಸಿದರು. ಸಾಹಿತ್ಯ ಎಲ್ಲರನ್ನು ಒಳಗೊಂಡು ಕಾಲದ ತಲ್ಲಣಗಳಿಗೆ ಪರಿಹಾರ ನೀಡುವ ಶಕ್ತಿಯನ್ನು ಹೊಂದಿದೆ ಎಂದು ಹೇಳಿದರು.
ಮೈಸೂರು ಮಹಾಜನ ಕಾಲೇಜಿನ ಕನ್ನಡ ವಿಭಾಗದ ಡಾ. ಎಚ್.ಆರ್. ತಿಮ್ಮೇಗೌಡ ಅವರು ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯರ ಜೀವನಪ್ರೀತಿ ಮತ್ತು ವ್ಯಕ್ತಿತ್ವ ಕುರಿತು ಮಾತನಾಡಿದರು. ಹೊನ್ನಾವರದ ಎಸ್ಡಿಎಂ ಕಾಲೇಜಿನ ಕನ್ನಡ ವಿಭಾಗದ ನಾಗರಾಜ ಹೆಗಡೆ ಅವರು ಅವರ ಸಾಹಿತ್ಯಪ್ರೀತಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಸುಧಾರಾಣಿ ಸಂವಾದವನ್ನು ನಿರ್ವಹಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನರಹಳ್ಳಿ ಅವರ ಆಯ್ದ ಪುಸ್ತಕಗಳನ್ನು ಅಧ್ಯಯನ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಆಳ್ವಾಸ್ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಬೆಂಗಳೂರಿನ ಅಭಿನವ ಪ್ರಕಾಶನದ ನ. ರವಿಕುಮಾರ್ ವಂದಿಸಿದರು. ವಿದ್ಯಾರ್ಥಿನಿಯರಾದ ಸೌಮ್ಯ ಕುಂದರ್ ಹಾಗೂ ಅನೀಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಲೇಖಕಿ ರಜನಿ ನರಹಳ್ಳಿ ಹಾಗೂ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

