ಮಂಗಳೂರಿನಲ್ಲಿ ವಿಎಚ್ಪಿ, ಬಜರಂಗದಳ ಬೃಹತ್ ಪ್ರತಿಭಟನೆ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಪ್ರಮುಖರಾದ ವಕೀಲ ಪ್ರತ್ಯುಷ್ ಧರ್ಮಸ್ಥಳ, ಲವ್ ಜಿಹಾದ್ ಎಂಬುದು ಕೇವಲ ಕಾಕತಾಳೀಯವಲ್ಲ, ಅದೊಂದು ವ್ಯವಸ್ಥಿತ ಸಂಚು. ಈಗ ಅದು ಕಾರ್ಪೊರೇಟ್ ಕ್ಷೇತ್ರಕ್ಕೂ ಲಗ್ಗೆ ಇಟ್ಟಿರುವುದು ಆತಂಕಕಾರಿ. ನಾಸಿಕ್ನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಗಳನ್ನು ಗುರಿಯಾಗಿಸಿ ಮತಾಂತರಕ್ಕೆ ಪ್ರೇರೇಪಿಸುತ್ತಿರುವುದು ಹಿಂದೂ ಸಮಾಜದ ವಿರುದ್ಧ ನಡೆಯುತ್ತಿರುವ ದೊಡ್ಡ ಮಟ್ಟದ ಪಿತೂರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲವ್ ಜಿಹಾದ್ ತಡೆಗೆ ದೇಶಾದ್ಯಂತ ಕಠಿಣ ಕಾನೂನು ಜಾರಿಗೆ ಬರಬೇಕು. ಕಾರ್ಪೊರೇಟ್ ಸಂಸ್ಥೆಗಳಲ್ಲಿ ನಡೆಯುತ್ತಿರುವ ಮತಾಂತರ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು. ಹಿಂದೂ ಯುವತಿಯರ ಮತ್ತು ಉದ್ಯೋಗಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿರಬೇಕು ಎಂದು ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ, ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಜರಂಗದಳ ಪ್ರಾಂತ ಸಂಯೋಜಕ ಭುಜಂಗ ಕುಲಾಲ್, ವಿಭಾಗ ಸಂಯೋಜಕ ಪುನೀತ್ ಅತ್ತಾವರ, ಜಿಲ್ಲಾ ಸಂಯೋಜಕ ನವೀನ್ ಮೂಡುಶೆಡ್ಡೆ, ಪ್ರಮುಖರಾದ ಪ್ರದೀಪ್ ಸರಿಪಲ್ಲ, ರವಿ ಅಸೆಗೋಳಿ, ಪ್ರೀತಂ ಕಾಟಿಪಳ್ಳ ಸೇರಿದಂತೆ ಹಲವರಿದ್ದರು. ಪ್ರತಿಭಟನೆಯ ಅಂತ್ಯದಲ್ಲಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.