ವ್ಯಸನ ಕೇವಲ ಮಾದಕ ವಸ್ತುವಿಗೆ ಸೀಮಿತವಲ್ಲ: ಡಾ. ಕೆ. ಕುಸುಮ
ನಗರದ ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಸೇವಾ ಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ಕೇಶವ ಸಂರಿತಿ ಸಂವರ್ಧನ ಸಮಿತಿ, ಮೂಲತ್ವ ಚಾರಿಟಬಲ್ ಟ್ರಸ್ಟ್, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ಕ್ರಾಸ್, ಎನ್ಸಿಸಿ (ಭೂದಳ ಮತ್ತು ನೌಕಾದಳ) ಹಾಗೂ ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಹಯೋಗದಲ್ಲಿ ವ್ಯಸನ ವಿರೋಧಿ ಜಾಗೃತಿ, ಪರಸ್ಪರ ಮಾತುಕತೆ ಮತ್ತು ಸಮಾಲೋಚನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದು ಜಗತ್ತಿನಲ್ಲಿ ಅನೇಕರು ವಿವಿಧ ರೀತಿಯ ವ್ಯಸನಗಳಿಂದ ಪ್ರಭಾವಿತರಾಗುತ್ತಿದ್ದಾರೆ. ಮಾದಕ ವಸ್ತುಗಳಿಗೆ ದಾಸರಾದರೆ, ವ್ಯಕ್ತಿಯ ಆಲೋಚನಾ ಸಾಮರ್ಥ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ವಿದ್ಯಾರ್ಥಿಗಳು ಈ ವಿಷಯಗಳ ಬಗ್ಗೆ ಜಾಗೃತರಾಗಿರಬೇಕು. ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನ ಕಾಯ್ದುಕೊಳ್ಳುವ ಮೂಲಕ ಆರೋಗ್ಯಕರ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಮಾದಕ ವ್ಯಸನ ಕುರಿತಂತೆ ಪ್ರಶ್ನೋತ್ತರದ ಮೂಲಕ ಸಂವಾದ ನಡೆಸಿದರು. ಇದೇ ವೇಳೆ, ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಶೇಷಪ್ಪ ಅಮೀನ್ ಕೆ., ಸೇವಾ ಭಾರತಿಯ ಕಾರ್ಯದರ್ಶಿ ಕೆ. ಚನ್ನಯ್ಯ ಸ್ವಾಮಿ, ಮೂಲತ್ವ ಚಾರಿಟಬಲ್
ಟ್ರಸ್ಟ್ನ ಸಂಸ್ಥಾಪಕ ಪ್ರಕಾಶ್ ಕೋಟ್ಯಾನ್, ಕೇಶವ ಸಂರಿತಿ ಸಂವರ್ಧನ ಸಮಿತಿ ಕಾರ್ಯದರ್ಶಿ ಗಜಾನನ ಪೈ ತೋನ್ಸೆ, ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯೋಜಕ ಡಾ. ಸಿದ್ಧರಾಜು ಎಂ.ಎನ್., ಎನ್ಸಿಸಿ ಭೂದಳದ ಮೇಜರ್ ಡಾ. ಜಯರಾಜ್ ಎನ್., ಎನ್ಸಿಸಿ ನೌಕಾದಳದ ಲೆಫ್ಟಿನೆಂಟ್ ಕಮಾಂಡರ್ ಪ್ರೊ. ಯತೀಶ್ ಕುಮಾರ್, ವೈಆರ್ ಸಿಯ ಕಾರ್ಯಕ್ರಮ ಅಧಿಕಾರಿ ಡಾ. ಭಾರತಿ ಪಿಲಾರ್, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ. ಸುರೇಶ್ ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.