ಡಾ. ಭಾನುಪ್ರಕಾಶ್ ಅವರಿಗೆ ಅಭಿನಂದನೆ
Monday, April 27, 2026
ಉಜಿರೆ: ಮಂಗಳೂರಿನ ಎಸ್ಡಿಎಂ ಬಿ.ಬಿ.ಎಂ ಕಾಲೇಜಿನ (ಎಸ್ಡಿಎಂಸಿಬಿಎಂ) ನೂತನ ಪ್ರಾಂಶುಪಾಲರಾಗಿ ನೇಮಕಗೊಂಡಿರುವ ಡಾ. ಭಾನುಪ್ರಕಾಶ್ ಬಿ.ಇ. ಅವರನ್ನು ಉಜಿರೆಯ ಎಸ್ಡಿಎಂ ಕಾಲೇಜಿನ ಅಧ್ಯಾಪಕರ ಸಂಘದ (ಸ್ಟಾಫ್ ಅಸೋಸಿಯೇಶನ್) ವತಿಯಿಂದ ಇತ್ತೀಚೆಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಡಾ. ಭಾನುಪ್ರಕಾಶ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಥೆಯಲ್ಲಿ ದೀರ್ಘಕಾಲ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರ ಅನುಭವವು ಮಂಗಳೂರಿನ ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಆಶಿಸಿದರು.
ಸನ್ಮಾನ ಸ್ವೀಕರಿಸಿದ ಡಾ. ಭಾನುಪ್ರಕಾಶ್ ಮಾತನಾಡಿ, ವೃತ್ತಿಜೀವನದ ಬೆಳವಣಿಗೆಗೆ ಮ್ಯಾನೇಜ್ಮೆಂಟ್ ಹಾಗೂ ಸಹೋದ್ಯೋಗಿಗಳು ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಮನ್ವಯಾಧಿಕಾರಿ ಪ್ರೊ. ಎಸ್. ಎನ್. ಕಾಕತ್ಕರ್, ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ್ ಪಿ., ಕನ್ನಡ ವಿಭಾಗದ ಮುಖ್ಯಸ್ಥೆ ಹಾಗೂ ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಭೋಜಮ್ಮ ಉಪಸ್ಥಿತರಿದ್ದರು.
ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
