ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ


ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ‘ನನ್ನ ಮತ ನನ್ನ ಹಕ್ಕು ಸಂಘಟನೆ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ನಗರದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ವಿನೋದ್ ಎಂ. ಅವರು ಎಸ್‌ಐಆರ್ ಎಂಬುದು ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ. ಚುನಾವಣಾ ಆಯೋಗವು ಕ್ಷುಲ್ಲಕ ಕಾರಣ ನೀಡಿ ಅರ್ಹ ಮತದಾರರನ್ನು ಚುನಾವಣೆಯಿಂದ ವಂಚಿತಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವವನ್ನು ದುರ್ಬಲ ಗೊಳಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.

ಕರ್ನಾಟಕ ವೆಲ್ಫೇರ್ ಪಾರ್ಟಿ ಕಾರ್ಯದರ್ಶಿ ಅಬ್ದುಲ್ ಸಲಾಮ್ ಮಾತನಾಡಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನೆಪದಲ್ಲಿ ಸಣ್ಣ ಪುಟ್ಟ ತಪ್ಪುಗಳನ್ನು ಹುಡುಕಿ ಅರ್ಹರನ್ನೂ ಪಟ್ಟಿಯಿಂದ ಹೊರಗಿಡುವ ಕೆಲಸ ಮಾಡುತ್ತಿದೆ. ಇದರಿಂದಾಗಿ ವಿವಿಧ ರಾಜ್ಯಗಳ ಸುಮಾರು 7.2 ಕೋಟಿ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಇದರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರ್, ಸಿಪಿಎಮ್ ನಾಯಕ ರಾಮಣ್ಣ ವಿಟ್ಲ ಮುಂತಾದವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾಷಣ ಮಾಡಿದರು.

ಮತದಾನದ ಹಕ್ಕು ಕಳೆದುಕೊಂಡಿರುವವರಲ್ಲಿ ಮಹಿಳೆಯರೇ ಹೆಚ್ಚಿದ್ದಾರೆ. ವಲಸೆ ಕಾರ್ಮಿಕರು, ದಲಿತ, ಆದಿವಾಸಿ, ಅಲೆಮಾರಿ ಸಮುದಾಯದವರು, ಲಿಂಗತ್ವ, ಧಾರ್ಮಿಕ ಅಲ್ಪಸಂಖ್ಯಾತರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿ ಪ್ರಜೆಗೆ ಮತದಾನದ ಹಕ್ಕು ನೀಡಿದೆ. ಕೇಂದ್ರ ಸರಕಾರವು ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಹುನ್ನಾರ ನಡೆಸುತ್ತಿದೆ. ಚುನಾವಣಾ ಆಯೋಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದರು.

ಮತದಾರರ ಪಟ್ಟಿಯಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಲು ಮತದಾರರಿಗೆ ಕಾಲಾವಕಾಶ ನೀಡಬೇಕು. ಅದನ್ನು ಬಿಟ್ಟು ಏಕಾಏಕಿ ಎಸ್‌ಐಆರ್ ಹೆಸರಿನಲ್ಲಿ ಹೆಸರು ಕಿತ್ತು ಹಾಕುವ ಕ್ರಮ ಸರಿಯಲ್ಲ ಎಂದು ಎಂದು ಪ್ರತಿಭಟನೆಕಾರರು ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ವಿವಿಧ ಪ್ರಗತಿ ಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಕರ್ನಾಟಕ ರಾಜ್ಯದೆಲ್ಲೆಡೆ ಜಿಲ್ಲಾ ಕೇಂದ್ರಗಳಲ್ಲಿ ಎಸ್‌ಐಆರ್ ವಿರೋಧಿ ಕರ್ನಾಟಕ ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿರುವ ನನ್ನ ಮತ ನನ್ನ ಹಕ್ಕು ಎಂಬ ಅಭಿಯಾನದ ಅಂಗವಾಗಿ ಈ ಪ್ರತಿಭಟನೆ ನಡೆದಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article