ಇಂದಿನ ಕಲಿಕೆಯೇ ನಾಳಿನ ನಾಯಕತ್ವದ ಅಡಿಪಾಯ: ಪ್ರೊ. ನರೇಂದ್ರ ಎಲ್. ನಾಯಕ್
ಅವರು ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್-2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಶಿಸ್ತಿನ ಕೊರತೆಯು ತಮ್ಮ ಜೀವನದ ಅಪೂರ್ಣತೆಗೆ ಕಾರಣವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಹಾಗೂ ವೃತ್ತಿಜೀವನದ ಮುಂದಿನ ಸವಾಲುಗಳನ್ನು ಎದುರಿಸುವಲ್ಲಿ ಮಾನಸಿಕವಾಗಿ ಸಿದ್ದರಾಗಬೇಕು. ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಧೃಡ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಸಕಾರಾತ್ಮಕ ಮನೋಭಾವ, ಸ್ಪಷ್ಟವಾದಗುರಿ ಮತ್ತು ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸಿನ ಶಿಖರ ತಲುಪಬಹುದು ಎಂದು ಸಲಹೆ ನೀಡಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ಅವರು ವಿದ್ಯಾರ್ಥಿಗಳು ವಿನಯತೆ, ಪ್ರಾಮಾಣಿಕತೆ ಹಾಗೂ ಶಿಸ್ತನ್ನು ಜೀವನದ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು. ಶಿಸ್ತಿನ ಜೀವನವೇ ಯಶಸ್ಸಿನ ದಾರಿಯನ್ನು ಬೆಳಗುತ್ತದೆ. ಮಕ್ಕಳ ನಡೆ-ನುಡಿ, ಶಿಸ್ತು ಮತ್ತು ಮೌಲ್ಯಗಳಲ್ಲಿ ಪೋಷಕರ ಆದರ್ಶ ಸ್ಪಷ್ಟವಾಗಿಕಾಣಿಸುತ್ತದೆ. ಉತ್ತಮ ಶಿಕ್ಷಣ ಮತ್ತು ಜೀವನಾನುಭವ ನಿರ್ಮಾಣದಲ್ಲಿ ಪೋಷಕರು, ಶಿಕ್ಷಣ ಸಂಸ್ಥೆ ಹಾಗೂ ವಿದ್ಯಾರ್ಥಿಗಳ ಸಮನ್ವಯ ಹಾಗೂ ಸಹಕಾರ ಅತ್ಯಂತ ಮುಖ್ಯ ಆಗ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಕನಸು ಕಾಣುವುದು ಯಶಸ್ಸಿನ ಮೊದಲ ಹೆಜ್ಜೆಯಾಗಿದ್ದು, ಅದನ್ನು ನನಸಾಗಿಸಲು ದೃಢ ಸಂಕಲ್ಪ ಪ್ರತಿಯೊಬ್ಬರಲ್ಲೂ ಇರಬೇಕು ಎಂದರು.
ಇದೇ ವೇಳೆ ಅವರುವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಬದುಕಿನಅಗತ್ಯತೆಯನ್ನು ಮನದಟ್ಟು ಗೊಳಿಸಿದರು.
ಕಾಲೇಜಿನ ಶೈಕ್ಷಣಿಕ ಸಮಿತಿಯ ಸದಸ್ಯ ಬಿ. ವಿನಯ್ ಕುಮಾರ್ ಇವರು ಶೈಕ್ಷಣಿಕ ಯೋಜನೆ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಅಧ್ಯಯನ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್. ಎನ್. ನಾಯಕ್ ಅವರು ತಂತ್ರಜ್ಞಾನ ಆಧಾರಿತ ಶಿಕ್ಷಣ ವ್ಯವಸ್ಥೆ, ಡಿಜಿಟಲ್ ಕಲಿಕಾ ವಿಧಾನಗಳು ಹಾಗೂ ಆನ್ಲೈನ್ ಅಧ್ಯಯನದ ಮಹತ್ತ್ವವನ್ನು ವಿವರಿಸಿದರು. ಆಧುನಿಕ ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ವಿದ್ಯಾರ್ಥಿಗಳ ಕಲಿಕೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುತ್ತದೆ ಎಂದು ಹೇಳಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್ ಅವರು ಪದವಿ ಪೂರ್ವ ಹಂತವು ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ತರ ಘಟ್ಟವಾಗಿದ್ದು ಈ ಸಮಯದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಸ್ತನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಹಾಗೂ ಪೋಷಕರು ಕಡ್ಡಾಯವಾಗಿ ಅನುಸರಿಸಬೇಕಾದ ಕೆಲವೊಂದು ನಿಬಂಧನೆಗಳನ್ನು ತಿಳಿಸಿದರು.
ಕಾರ್ಯಕ್ರಮದ ಸಂಯೋಜಕಿ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ರಾಧಿಕಾ ಭಟ್ ಹಾಗೂ ಇತರ ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಉಜ್ವಲ್ ಪ್ರದೀಪ್ ಅವರು ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಭರತ್ಚಂದ್ರ ಎಲ್. ವಂದಿಸಿದರು.